ಬೆಂಗಳೂರು: ರಾಜ್ಯದ ಶಕ್ತಿಕೇಂದ್ರ ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಸಂಬಂಧ ಸರ್ಕಾರ ವಾರ್ತಾ ಇಲಾಖೆಗೆ ಪತ್ರ ಬರೆದಿದೆ. ಮಾಧ್ಯಮಗಳು ರಾಜಕೀಯ ನಾಯಕರ ಪ್ರತಿಕ್ರಿಯೆಗಳನ್ನು (ಬೈಟ್) ಪೋರ್ಟಿಕೋ ಅಥವಾ ಕೆಂಗಲ್ ಗೇಟ್ ಬಳಿಯ ನಿಗದಿತ ಸ್ಥಳದಲ್ಲಿ ಮಾತ್ರ ತೆಗೆದುಕೊಳ್ಳಬೇಕು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಅಥವಾ ಶಾಸಕರನ್ನು ವಿಧಾನಸೌಧದ ಇತರ ಯಾವುದೇ ಸ್ಥಳದಲ್ಲಿ ಹಿಂಬಾಲಿಸಿ ಪ್ರತಿಕ್ರಿಯೆ ಪಡೆಯುವುದನ್ನು ನಿಷೇಧಿಸಬೇಕು ಎಂದು ಸೂಚಿಸಿದೆ.
ಸರ್ಕಾರದ ಈ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿಪಕ್ಷಗಳಷ್ಟೇ ಅಲ್ಲದೆ ಆಡಳಿತ ಪಕ್ಷಗಳ ಮುಖಂಡರೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ ಈ ನಡೆ ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಎಂದು ಹೇಳಿದ್ದಾರ. ಮಾಧ್ಯಮಗಳು ಸಾರ್ವಜನಿಕರು ಮತ್ತು ಸರ್ಕಾರದ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತವೆ.
ಸರ್ಕಾರವು ತನ್ನ ಲೋಪಗಳನ್ನು ಸರಿಪಡಿಸಿಕೊಳ್ಳುವ ಬದಲು ಮಾಧ್ಯಮಗಳ ಮೇಲೆ ನಿಯಂತ್ರಣ ಹೇರುವುದು ಸರಿಯಲ್ಲ. ಇದು ಕಾಂಗ್ರೆಸ್ ಪಕ್ಷವು ತುರ್ತು ಪರಿಸ್ಥಿತಿಯ ಸಮಯದಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಿದ ಇತಿಹಾಸವನ್ನು ನೆನಪಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ವಿಧಾನಸೌಧದಲ್ಲಿ ಮಾಧ್ಯಮ ಸ್ವಾತಂತ್ರ್ಯ ಹತ್ತಿಕ್ಕುವುದು ಸರಿಯಲ್ಲ. ಮಾಧ್ಯಮಗಳ ಮೇಲೆ ನಿರ್ಬಂಧ ತಪ್ಪು ಎಂದಿದ್ದಾರೆ.
ಬಿಜೆಪಿ ಶಾಸಕ S.R. ವಿಶ್ವನಾಥ್ ಮಾತನಾಡಿ, ವಿಧಾನಸೌಧದಲ್ಲಿ ನಡೆದ ಘಟನೆ ಪೊಲೀಸರ ವೈಫಲ್ಯದಿಂದ ಆಗಿದ್ದು. ಯಾರೋ ಷಡ್ಯಂತ್ರ ಮಾಡಿ, ಅಥವಾ ಆಕಸ್ಮಿಕವಾಗಿ ಆದ ಘಟನೆ ಅದು. ಮಾಧ್ಯಮದವರಿಗೆ ಯಾಕೆ ಕಡಿವಾಣ ಎಂದು ಪ್ರಶ್ನಿಸಿದ್ದಾರೆ.