ಬೆಂಗಳೂರು: ಚಿತ್ರದುರ್ಗ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ಅಂತ್ಯ ಸಂಸ್ಕಾರ ಇಂದು ಸಂಜೆ ಚಳ್ಳಕೆರೆಯಲ್ಲಿ ನಡೆಯಿಲಿದೆ. ಮೊದಲು ಹಿರಿಯೂರಿನಲ್ಲಿ ಅಂತ್ಯಸಂಸ್ಕಾರ ಮಾಡುವುದಾಗಿ ಅವರ ಕುಟುಂಬ ತಿಳಿಸಿತ್ತು. ಆದರೆ ಈಗ ಸ್ಥ:ಳ ಬದಲಾಯಿಸಿದ್ದು, ಪಾವಗಡ ರಸ್ತೆಯ ಮುಕ್ತಿಧಾಮದಲ್ಲಿ ಅಂತ್ಯ ಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ. ಜೈನ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನೆರವೇರಲಿದೆ ಎಂದು ಸುಧಾಕರ್ ಪುತ್ರ ಸುಹಾಸ್ ತಿಳಿಸಿದ್ದಾರೆ.
ಇಂದು ಸಂಜೆ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಸಚಿವರು, ಶಾಸಕರು ಭಾಗವಹಿಸಲಿದ್ದಾರೆ. ಇಂದು ಹಿರಿಯೂರಿನ ಸುಧಾಕರ್ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರ ದರ್ಶನ ವ್ಯವಸ್ಥೆ ಮಾಡಲಾಗಿದ್ದು, . ಸುಧಾಕರ್ ಸಾವಿರಾರು ಅಭಿಮಾನಿಗಳು ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಇಂದು ಸಚಿವರಾದ ಡಾ. ಎಚ್.ಸಿ.ಮಹದೇವಪ್ಪ, ಮಧು ಬಂಗಾರಪ್ಪ ಸೇರಿದಂತೆ ಅನೇಕ ಗಣ್ಯರು ಮೃತರ ಅಂತಿಮ ದರ್ಶನ ಪಡೆದರು. ಡಿ.ಸುಧಾಕರ್ ಒಳ್ಳೆಯ ಸ್ನೇಹಜೀವಿ ವ್ಯಕ್ತಿಯಾಗಿದ್ದರು. ಮಹದೇವಪ್ಪ ಪ್ರತಿಕ್ರಿಯೆ ನೀಡಿ, ರಾಜಕೀಯದಲ್ಲಿ ಜನರ ಆಶೀರ್ವಾದ, ವಿಶ್ವಾಸ ಗಳಿಸಿದ್ದರು. ಸಾರ್ವಜನಿಕ ಜೀವನದಲ್ಲಿಯೂ ಉತ್ತಮ ಸ್ನೇಹಜೀವಿ. ಸಹೋದ್ಯೋಗಿಯನ್ನು ಕಳದೆಕೊಂಡು ದುಃಖವಾಗಿದೆ. ಅವರ ಕುಟುಂಬದವರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದಿದ್ದಾರೆ.
ಸರ್ಕಾರಿ ರಜೆ:
ಚಿತ್ರದುರ್ಗಕ್ಕೆ ಅನ್ವಯವಾಗುವಂತೆ ಇಂದು ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, 3 ದಿನ ರಾಜ್ಯಾದ್ಯಂತ ಶೋಕಾಚರಣೆಯನ್ನೂ ಘೋಷಿಸಿದೆ. ಇಂದು ಚಿತ್ರದುರ್ಗ ಜಿಲ್ಲೆಯ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ಸೇರಿದಂತೆ) ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಸಾರ್ವಜನಿಕ ರಜೆ ಘೋಷಿಸಲಾಗಿದೆ.