2026-03-07 06:33:47

Minister Ishwara Khandre | ನಾಗರಹೊಳೆ ಬಂಡೀಪುರ ಅರಣ್ಯದಲ್ಲಿ ಸಫಾರಿ ಪುನಾರಂಭ: ಸಚಿವ ಈಶ್ವರ ಖಂಡ್ರೆ | Speed News Kannada

Minister Ishwara Khandre | ನಾಗರಹೊಳೆ ಬಂಡೀಪುರ ಅರಣ್ಯದಲ್ಲಿ ಸಫಾರಿ ಪುನಾರಂಭ: ಸಚಿವ ಈಶ್ವರ ಖಂಡ್ರೆ | Speed News Kannada

ಬೆಂಗಳೂರು: ಮಾನವ-ವನ್ಯಜೀವಿ ಸಂಘರ್ಷ ಅದರಲ್ಲೂ ಹುಲಿ ದಾಳಿಯಿಂದ ಸರಣಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಕಳೆದ ನವೆಂಬರ್ 7 ರಿಂದ ಸ್ಥಗಿತಗೊಳಿಸಲಾಗಿದ್ದ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಸಫಾರಿಯನ್ನು ತಾಂತ್ರಿಕ ಸಮಿತಿಯ ವರದಿ ಆಧರಿಸಿ ಹಂತ ಹಂತವಾಗಿ ಪುನಾರಂಭಿಸಲು ನಿರ್ಧರಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿಂದು ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪರಿಸರ ಪ್ರವಾಸೋದ್ಯಮದ ಧಾರಣಾ ಸಾಮರ್ಥ್ಯವನ್ನು (Eco-Tourism carrying capacity) ವೈಜ್ಞಾನಿಕವಾಗಿ ನಿಗದಿ ಪಡಿಸಲು ರಚಿಸಲಾಗಿರುವ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದ ತಾಂತ್ರಿಕ ಸಮಿತಿ ನೀಡಿರುವ ಪ್ರಾಥಮಿಕ ವರದಿಯ ಪರಾಮರ್ಶೆ ನಡೆಸಿದರು.
ಹೆಗ್ಗಡ ದೇವನಕೋಟೆಯಲ್ಲಿ ರೈತರೂ ಸೇರಿದಂತೆ ಸಾವಿರಾರು ಸ್ಥಳೀಯರು, ರೆಸಾರ್ಟ್ ಸಿಬ್ಬಂದಿ ಪ್ರತಿಭಟನೆ ನಡೆಸಿ ಸಫಾರಿ ನಿಲ್ಲಿಸಿರುವುದರಿಂದ ತಮ್ಮ ಜೀವನೋಪಾಯಕ್ಕೆ ಅಡ್ಡಿಯಾಗಿದ್ದು, ಸಫಾರಿ ಪುನಾರಂಭಿಸಬೇಕು ಎಂದು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದ ಹಲವು ಮಾಧ್ಯಮಗಳಲ್ಲಿ ಸಫಾರಿ ಪುನಾರಂಭಿಸಬೇಕು ಎಂದು ವರದಿಗಳು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಜೀವವೂ ಉಳಿಯಬೇಕು, ಜೀವನೋಪಾಯವೂ ಇರಬೇಕು ಎಂಬ ಕಾರಣಕ್ಕಾಗಿ ಸಫಾರಿಯನ್ನು ನಿಯಂತ್ರಿತವಾಗಿ ಮತ್ತು ಹಂತಹಂತವಾಗಿ ಪುನಾರಂಭ ಮಾಡುವ ಕುರಿತು ಸುದೀರ್ಘ ಚರ್ಚೆ ನಡೆಸಿದರು.
ನಂತರ ಅವರು, ಬಂಡೀಪುರದಲ್ಲಿ ನವೆಂಬರ್ ವರೆಗೆ ನಡೆಯುತ್ತಿದ್ದ ಟ್ರಿಪ್, ಸಮಯ ಮತ್ತು ವಾಹನ ಸಂಖ್ಯೆಯಲ್ಲಿ ಕಡಿತ ಮಾಡಿ ಸಫಾರಿ ಪುನಾರಂಭಕ್ಕೆ ಸಮ್ಮತಿಸಲಾಗಿದೆ ಎಂದು ತಿಳಿಸಿದರು.
ಈ ಹಿಂದೆ ಬಂಡೀಪುರದಲ್ಲಿ 8 ಗಂಟೆಗಳ ಕಾಲ ಸಫಾರಿ ನಡೆಯುತ್ತಿತ್ತು. ಈಗ ಅದನ್ನು 5 ಗಂಟೆಗೆ ತಗ್ಗಿಸಲಾಗಿದೆ. ಅದೇ ರೀತಿ ಸುಂಕದಕಟ್ಟೆಯಲ್ಲಿ 6 ಗಂಟೆ ಹಾಗೂ ನಾಗರಹೊಳೆಯಲ್ಲಿ 4 ಗಂಟೆ ಕಾಲ ಮಾತ್ರ ಸಫಾರಿಗೆ ಪ್ರಥಮ ಹಂತದಲ್ಲಿ ಅನುಮತಿಸಲಾಗಿದೆ ಎಂದೂ ವಿವರಿಸಿದರು. 
ಮುಖ್ಯಮಂತ್ರಿಗಳ ನೇತೃತ್ವದ ಸಭೆಯಲ್ಲಿ ನಿರ್ಧಾರ:
ಕಳೆದ ಜನವರಿ 2ರಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಕರ್ನಾಟಕ ವನ್ಯಜೀವಿ ಮಂಡಳಿಯ 20ನೇ ಸಭೆಯಲ್ಲಿ ತಾಂತ್ರಿಕ ಸಮಿತಿ ರಚಿಸಿ, ಅಧ್ಯಯನ ವರದಿಯ ಆಧಾರದಲ್ಲಿ ಹಂತಹಂತವಾಗಿ ಸಫಾರಿ ಆರಂಭಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ಅಪರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಇತರೆ ಅಧಿಕಾರಿಗಳು, ಭಾರತೀಯ ವನ್ಯಜೀವಿ ಸಂಸ್ಥೆ, ಡೆಹ್ರಾಡೂನ್ (WII)‌ ವಿಜ್ಞಾನಿ, ಭಾರತೀಯ ಅರಣ್ಯ ನಿರ್ವಹಣಾ ಸಂಸ್ಥೆ, ಭೋಪಾಲ್ (IIFM)‌ ರ ಪ್ರಾಧ್ಯಾಪಕರನ್ನು ಒಳಗೊಂಡ ತಾಂತ್ರಿಕ ಸಮಿತಿ ರಚಿಸಲಾಗಿತ್ತು. ಈ ಸಮಿತಿ ನೀಡಿದ ಮಧ್ಯಂತರ ವರದಿಯ ಬಗ್ಗೆ ಇಂದು ಕೂಲಂಕಷವಾಗಿ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಸಫಾರಿ ಆದಾಯದ ಮೂರನೇ ಒಂದು ಭಾಗ ಸ್ಥಳೀಯ ಅಭಿವೃದ್ಧಿಗೆ:
ಪ್ರಸ್ತುತ ಪರಿಸರ ಪ್ರವಾಸೋದ್ಯಮ ಅಂದರೆ ಸಫಾರಿಯಿಂದ ಬರುವ ಒಟ್ಟು ಆದಾಯದ ಮೂರನೇ ಒಂದು ಭಾಗದಷ್ಟು ಹಣವನ್ನು ಅರಣ್ಯದಂಚಿನ ಗ್ರಾಮಗಳ ಸ್ಥಳೀಯ ಸಮುದಾಯದವರಿಗೆ ಕೌಶಲ್ಯ ಅಭಿವೃದ್ಧಿಗಾಗಿ, ಜಾನುವಾರುಗಳಿಗೆ ಮೇವು ಬೆಳೆಸಲು ಮತ್ತು ಪರಿಸರ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಲು ನಿರ್ಧರಿಸಲಾಗಿದೆ. ಮುಂದಿನ 2 ತಿಂಗಳೊಳಗಾಗಿ ಎಲ್ಲ ಸಫಾರಿ ವಾಹನಗಳಿಗೆ ಎಂಜಿನ್ ಸಂಪರ್ಕಿತ ಜಿಪಿಎಸ್ ಮತ್ತು ಡ್ಯಾಷ್ ಕ್ಯಾಮ್ ಅಳವಡಿಸಬೇಕು ಎಂದೂ ಸೂಚಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು. 
ಕಳೆದ 2 ತಿಂಗಳಲ್ಲಿ  ಯಾವುದೇ ಪ್ರಮುಖ ಅಹಿತಕರ ಘಟನೆಗಳು ನಡೆಯದಿರುವ ಹಿನ್ನೆಲೆಯಲ್ಲಿ ಹಂತಹಂತವಾಗಿ ಸಫಾರಿ ಪುನಾರಂಭಿಸಬಹುದು ಎಂದು ಶಿಫಾರಸ್ಸು ಮಾಡಿದ್ದರು ಎಂದೂ ತಿಳಿಸಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.