ಬೆಂಗಳೂರು: ಇಂದು ಬೆಂಗಳೂರಿನ ಜವಾಹರಲಾಲ್ ನೆಹರು ತಾರಾಲಯದಲ್ಲಿ 'ರಾಷ್ಟ್ರೀಯ ವಿಜ್ಞಾನ ದಿನಾಚರಣೆ' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಮಾರಂಭದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಬೋಸರಾಜು, ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕುಮಾರ್ ಬಂಗಾರಪ್ಪ ವರು, ಸಂವಿಧಾನದ 51(h) ವಿಧಿಯ ಆಶಯದಂತೆ ಪ್ರತಿಯೊಬ್ಬರಲ್ಲಿ ವಿಶೇಷವಾಗಿ ವಿದ್ಯಾರ್ಥಿಯಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ವೈಚಾರಿಕತೆಯನ್ನು ಬೆಳೆಸುವುದು ನಮ್ಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಕೆಲವು ಪ್ರಮುಖ ಅಂಶಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳಲಾಯಿತು ಎಂದರು.
- ಸಾಮಾಜಿಕ ಜಾಲತಾಣಗಳಲ್ಲಿ ಹರಿದುಬರುವ ಮಾಹಿತಿಯನ್ನು ಕುರುಡಾಗಿ ನಂಬದೆ, ವೈಜ್ಞಾನಿಕವಾಗಿ ವಿಶ್ಲೇಷಿಸಿ ಸತ್ಯಾಸತ್ಯತೆ ತಿಳಿಯುವ ಗುಣ ಬೆಳೆಸಿಕೊಳ್ಳಬೇಕು.
- ಕೇವಲ ಪಠ್ಯಕ್ಕೆ ಸೀಮಿತವಾಗದೆ 'ಆಕಾಶವೇ ಎಲ್ಲೆ' ಎಂಬಂತೆ ಹೊಸ ಆವಿಷ್ಕಾರಗಳತ್ತ (Innovation) ಗಮನಹರಿಸಬೇಕು.
- ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನದ ಅರಿವು ಮೂಡಿಸಲು ನಮ್ಮ ಇಲಾಖೆ ಸದಾ ಬದ್ಧವಾಗಿದೆ.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಮತ್ತು ಮಾನವೀಯ ಮೌಲ್ಯಗಳ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಸಮಾರಂಭದಲ್ಲಿ ಇಸ್ರೋದ ವಿಕ್ರಮ್ ಸಾರಾಭಾಯ್ ಪ್ರೊಫೆಸರ್ ಹಾಗೂ ಬಾಹ್ಯಾಕಾಶ ಆಯೋಗದ ಸದಸ್ಯ ಎ. ಎಸ್. ಕಿರಣ್ ಕುಮಾರ್, ಐಟಿ-ಬಿಟಿ ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ. ಮಂಜುಳಾ ಎನ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕ ಸದಾಶಿವ ಪ್ರಭು ಬಿ, ಜವಾಹರಲಾಲ್ ನೆಹರು ತಾರಾಲಯದ ನಿರ್ದೇಶಕ ಡಾ. ಬಿ. ಆರ್. ಗುರುಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು, ವಿಜ್ಞಾನಿಗಳು ಮತ್ತು ವಿವಿಧ ಶಾಲೆಯ ವಿದ್ಯಾರ್ಥಿಗಳು ವಿಜ್ಞಾನ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.