ನವದೆಹಲಿ: ಮಾಜಿ ಕ್ರಿಕೆಟ್ ಆಟಗಾರ, ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಅವರ ಪತ್ನಿ ಹಾಗೂ ಮಾಜಿ ಶಾಸಕಿ ಡಾ. ನವಜೋತ್ ಕೌರ್ ಸಿಧು ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ. ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಭೂಪೇಶ್ ಬಘೇಲ್ ಅವರು ನವಜೋತ್ ಕೌರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಲಾಗಿದೆ ಎಂದು ಪ್ರಕಟಣೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಭೂಪೇಶ್ ಬಘೇಲ್ , ಪಕ್ಷದ ಶಿಸ್ತು ಎಲ್ಲಕ್ಕಿಂತ ಮುಖ್ಯ. ಪಕ್ಷದ ಗೆರೆ ದಾಟುವವರು ಮತು ಪಕ್ಷದ ವಿರುದ್ಧ ಕೆಲಸ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
ನವಜೋತ್ ಕೌರ್ ಸಿಧು ರಾಹುಲ್ ಗಾಂಧಿಯನ್ನು ಪಪ್ಪು ಎಂದು ಕರೆದಿದ್ದರು ಎಂದು ಆರೋಪಿಸಿದ್ದರು. ನವಜೋತ್ ಕೌರ್ ಸಿಧು ಅವರು ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಪಂಜಾಬ್ ಮುಖ್ಯಮಂತ್ರಿಯಾಗಲು 500 ಕೋಟಿ ರೂ. ನೀಡಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಎಲ್ಲ ಕಾರಣಗಳಿಗಾಗಿ ಅವರನ್ನು ಉಚ್ಛಾಟಿಸಲಾಗಿದೆ ಎಂದು ಹೇಳಲಾಗುತ್ತಿದೆ.
ನವಜೋತ್ ಕೌರ್ ಸಿಧು ಅವರು ಪ್ರಧಾನಿ ಮೋದಿ ಅವರನ್ನು ಬೆಂಬಲಿಸುತ್ತಾ ಹೇಳಿಕೆ ನೀಡುತಿದ್ದು, ಬಿಜೆಪಿ ಸೇರಬಹುದು ಎಂದು ಭಾವಿಸಲಾಗಿದೆ. ಆದರೆ ಸ್ಥಳೀಯ ಬಿಜೆಪಿ ನಾಯಕ ಮಾಜಿ ಸಚಿವ ಮನೋರಂಜನ್ ಕಾಲಿಯಾ ಅವರು ಸಿಧು ದಂಪತಿಗೆ ಬಿಜೆಪಿ ಬಾಗಿಲು ಮುಚ್ಚಿದೆ ಎಂದು ಹೇಳಿದ್ದರು.