ಭಾರತೀಯ ಹವಾಮಾನ ಇಲಾಖೆ ನೀಡಿರುವ ಹೊಸ ಮುನ್ಸೂಚನೆಯ ಪ್ರಕಾರ, ನೈಋತ್ಯ ಮಾನ್ಸೂನ್ ಮೇ 14 ರಿಂದ 16ರ ನಡುವೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ತಲುಪುವ ಸಾಧ್ಯತೆ ಇದೆ.ಮೇ ತಿಂಗಳಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಇದರಿಂದ ದೇಶದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವ ಉರಿಬಿಸಿಲು ಪರಿಸ್ಥಿತಿಗೆ ಭಾಗಶಃ ಪರಿಹಾರ ಸಿಗುವ ನಿರೀಕ್ಷೆಯಿದೆ.
ಆದರೆ, ಕೆಲವು ಪ್ರದೇಶಗಳಲ್ಲಿ ಶಾಖದ ಅಲೆ ಮುಂದುವರಿಯುವ ಸಾಧ್ಯತೆಯೂ ಇದೆ. ಹಿಮಾಲಯದ ತಪ್ಪಲಿನ ಭಾಗಗಳು, ಪೂರ್ವ ಕರಾವಳಿ ರಾಜ್ಯಗಳು, ಗುಜರಾತ್ ಮತ್ತು ಮಹಾರಾಷ್ಟ್ರಗಳಲ್ಲಿ ಹೀಟ್ವೇವ್ ದಿನಗಳು ಹೆಚ್ಚಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ.ಮತ್ತೊಂದು ಕಡೆ, ಪೂರ್ವ, ಈಶಾನ್ಯ ಮತ್ತು ಪೂರ್ವ ಮಧ್ಯ ಭಾರತದ ಕೆಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ.
IMD ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಅವರ ಪ್ರಕಾರ, ದೇಶದ ಹಲವು ಭಾಗಗಳಲ್ಲಿ ಕನಿಷ್ಠ ತಾಪಮಾನವೂ ಸಾಮಾನ್ಯಕ್ಕಿಂತ ಹೆಚ್ಚಾಗಿರಲಿದೆ.ಹವಾಮಾನ ಇಲಾಖೆಯು ಎಲ್ ನಿನೋ ಪರಿಸ್ಥಿತಿಯತ್ತ ಸಾಗುತ್ತಿರುವ ಸೂಚನೆಗಳನ್ನೂ ಗಮನಿಸುತ್ತಿದೆ ಎಂದು ತಿಳಿಸಿದೆ