ಬೆಂಗಳೂರು: ನಮ್ಮ ಮೆಟ್ರೊ ರೈಲು ಸೇವೆಯಲ್ಲಿ ಮೂರು ವರ್ಷಗಳಿಂದ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ಸಮಗ್ರ ತನಿಖೆ ನಡೆಸಿ, ಕೈಗೊಂಡಿರುವ ಸುಧಾರಣಾ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ರೈಲ್ವೆ ಸುರಕ್ಷತಾ ಆಯುಕ್ತರು ನಮ್ಮ ಮೆಟ್ರೊ ರೈಲು ನಿಗಮಕ್ಕೆ (ಬಿಎಂಆರ್ಸಿಎಲ್) ನಿರ್ದೇಶನ ನೀಡಿದ್ದಾರೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಕಳೆದ ಮೂರು ವರ್ಷಗಳಲ್ಲಿನ ವಿವಿಧ ಸಮಸ್ಯೆಗಳ ಬಗ್ಗೆ ದಾಖಲೆ ಸಮೇತ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಕೇಂದ್ರದಿಂದ ಈ ಮಹತ್ವದ ಆದೇಶ ಹೊರಬಿದ್ದಿದೆ. ಈ ಬಗ್ಗೆ ತೇಜಸ್ವಿ ಸೂರ್ಯ ತಮ್ಮ ಖಾತೆಯಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರು ನಮ್ಮ ಮೆಟ್ರೊ ರೈಲು ನಿಗಮಕ್ಕೆ ಬರೆದ ಪತ್ರವನ್ನು ಹಂಚಿಕೊಂಡಿದ್ದಾರೆ.
ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯ ಬಿಎಂಆರ್ಸಿಎಲ್ನ ಮೊದಲ ಆದ್ಯತೆಯಾಗಬೇಕು. ರಾಜ್ಯ ಸರ್ಕಾರವು ಈ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕಿದೆ. ನಮ್ಮ ಮೆಟ್ರೊದ ಕಾರ್ಯಾಚರಣೆ ಮತ್ತು ನಿರ್ವಹಣೆಯ ಸಂಪೂರ್ಣ ಜವಾಬ್ದಾರಿ ಹೊತ್ತಿರುವ ರಾಜ್ಯ ಸರ್ಕಾರವೇ ಸುರಕ್ಷತೆ, ವಿಶ್ವಾಸಾರ್ಹ ಮತ್ತು ಅಡೆತಡೆಯಿಲ್ಲದ ಸೇವೆಗೆ ಉತ್ತರದಾಯಿಯಾಗಿದೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.
2024ರಿಂದ ಈವರೆಗೆ ಮೆಟ್ರೊ ಸೇವೆಯಲ್ಲಿ 20ಕ್ಕೂ ಹೆಚ್ಚು ಬಾರಿ ದೊಡ್ಡ ಮಟ್ಟದ ವ್ಯತ್ಯಯಗಳು ವರದಿಯಾಗಿವೆ. ಬಿಎಂಆರ್ಸಿಎಲ್ ಈ ವೈಫಲ್ಯಗಳನ್ನು ತಕ್ಷಣವೇ ಸರಿಪಡಿಸುವ ಮೂಲಕ ಪ್ರಯಾಣಿಕರಲ್ಲಿ ಮತ್ತೆ ವಿಶ್ವಾಸ ಮೂಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ