2026-09-13 12:45:41

Murder in Surathkal | ಸುರತ್ಕಲ್‌ನಲ್ಲಿ ಮರ್ಡರ್ 20 ವರ್ಷದ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ ನನಗೇನೂ ಗೊತ್ತಿಲ್ಲ ಎಂದವನ ಗ್ರಹಚಾರ ಬಿಡಿಸಿದ ಖಾಕಿ! | SNK

Murder in Surathkal | ಸುರತ್ಕಲ್‌ನಲ್ಲಿ ಮರ್ಡರ್ 20 ವರ್ಷದ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ ನನಗೇನೂ ಗೊತ್ತಿಲ್ಲ ಎಂದವನ ಗ್ರಹಚಾರ ಬಿಡಿಸಿದ ಖಾಕಿ! | SNK

ಮಂಗಳೂರು : ಸ್ವಂತ ಅಣ್ಣನೇ ಮಲಗಿದ್ದ ಸೋದರನ ತಲೆಗೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಂದಿರುವ ಘಟನೆ ಸುರತ್ಕಲ್‌ನ ಚೊಕ್ಕಬೆಟ್ಟು ಮಠದ ಬಳಿ ಭಾನುವಾರ ತಡರಾತ್ರಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ತಕ್ಷಣ ಕಾರ್ಯಪ್ರವೃತ್ತರಾದ ಸುರತ್ಕಲ್ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಮೂಲತಃ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತೆಗ್ಯಾಳು ಗ್ರಾಮದ ನಿವಾಸಿಯಾಗಿದ್ದ ಮಲ್ಲಿಕಾರ್ಜುನ (20) ಕೊಲೆಯಾದ ವ್ಯಕ್ತಿ. ಈತನ ಅಣ್ಣ ಸೋಮನಾಥ (21) ಕೊಲೆಗೈದ ಆರೋಪಿ. ಇವರಿಬ್ಬರೂ ಚೊಕ್ಕಬೆಟ್ಟು ಮಠದ ಬಳಿ ರೇಖಾ ಎಂಬವರ ಬಾಡಿಗೆ ಮನೆಯಲ್ಲಿ ತಾಯಿಯೊಂದಿಗೆ ವಾಸವಾಗಿದ್ದರು. ಇತ್ತೀಚೆಗೆ ತಾಯಿ ಊರಿಗೆ ತೆರಳಿದ್ದರಿಂದ ಘಟನೆ ನಡೆದಾಗ ಸಹೋದರರಿಬ್ಬರು ಮಾತ್ರ ಮನೆಯಲ್ಲಿದ್ದರು.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಭಾನುವಾರ ರಾತ್ರಿ ಸಹೋದರರಿಬ್ಬರ ನಡುವೆ ಯಾವುದೋ ವಿಷಯಕ್ಕೆ ಸಂಬಂಧಿಸಿದಂತೆ ತೀವ್ರ ಜಗಳ ನಡೆದಿತ್ತು. ಜಗಳ ವಿಕೋಪಕ್ಕೆ ತಿರುಗಿದ ಬಳಿಕ ಮಲ್ಲಿಕಾರ್ಜುನ ರೂಮಿನಲ್ಲಿ ಮಲಗಿದ್ದ. ತಡರಾತ್ರಿ ಆತ ಗಾಢ ನಿದ್ರೆಯಲ್ಲಿದ್ದಾಗ ಆಕ್ರೋಶಗೊಂಡ ಸೋಮನಾಥ, ಮಲಗಿದ್ದ ಜಾಗದಲ್ಲೇ ಮಲ್ಲಿಕಾರ್ಜುನನ ತಲೆಗೆ ಭಾರಿ ಗಾತ್ರದ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವದಿಂದ ಮಲ್ಲಿಕಾರ್ಜುನ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಕೃತ್ಯ ಎಸಗಿದ ಬಳಿಕ ಸೋಮನಾಥ ಏನೂ ತಿಳಿಯದವನಂತೆ ನಟಿಸಿದ್ದಾನೆ. ಸೋಮವಾರ ಬೆಳಗ್ಗೆದ್ದು ನೆರೆಹೊರೆಯವರ ಬಳಿ ಹೋಗಿ, “ನನ್ನ ತಮ್ಮ ನಿದ್ರೆಯಿಂದ ಏಳುತ್ತಲೇ ಇಲ್ಲ” ಎಂದು ನಾಟಕವಾಡಿದ್ದಾನೆ. ಇದರಿಂದ ಅನುಮಾನಗೊಂಡ ಜನರು ತಕ್ಷಣವೇ ಮನೆಯ ಮಾಲೀಕರಿಗೆ ತಿಳಿಸಿದ್ದು, ಅವರು ಪೊಲೀಸರಿಗೆ ತುರ್ತು ಮಾಹಿತಿ ರವಾನಿಸಿದ್ದಾರೆ. ಘಟನೆಯ ಗಾಂಭೀರ್ಯತೆಯನ್ನು ಅರಿತು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, “ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆತಂದು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಭಾನುವಾರ ರಾತ್ರಿ ಇಬ್ಬರ ನಡುವೆ ಜಗಳ ನಡೆದಿತ್ತು. ಆಗ ಕೋಪದಲ್ಲಿ ತಾನೇ ತಮ್ಮನ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ” ಎಂದು ತಿಳಿಸಿದ್ದಾರೆ.

ಪ್ರಸ್ತುತ ಘಟನಾ ಸ್ಥಳಕ್ಕೆ ಡಿಸಿಪಿ ಮಿಥುನ್ ಹೆಚ್.ಎಂ., ಪಣಂಬೂರು ಉಪ ವಿಭಾಗದ ಎಸಿಪಿ ಶ್ರೀಕಾಂತ್ ಹಾಗೂ ಸುರತ್ಕಲ್ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನ ದಳ, ಬೆರಳಚ್ಚು ತಜ್ಞರು ಹಾಗೂ ವಿಧಿವಿಜ್ಞಾನ ತಜ್ಞರ ತಂಡ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.