ಮೈಸೂರಿನಲ್ಲಿ ಡ್ರಗ್ಸ್ ಜಾಲದ ವಿರುದ್ಧ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಪೊಲೀಸರು ಭಾರೀ ಕಾರ್ಯಾಚರಣೆ ನಡೆಸಿದ್ದು, ಸುಮಾರು 10 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳು ಹಾಗೂ ಡ್ರಗ್ಸ್ ತಯಾರಿಕೆಗೆ ಬಳಸಲಾಗುತ್ತಿದ್ದ ರಾಸಾಯನಿಕಗಳನ್ನು ಜಪ್ತಿ ಮಾಡಿದ್ದಾರೆ.-ಎನ್ಸಿಬಿ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಮೈಸೂರಿನಲ್ಲಿ ಅಕ್ರಮವಾಗಿ ಪ್ರಯೋಗಾಲಯ ನಡೆಸುತ್ತಿದ್ದ ಆರೋಪಿಗಳ ಮೇಲೆ ದಾಳಿ ನಡೆಸಲಾಗಿದ್ದು, ವಾಹನದೊಂದಿಗೆ 35 ಕೆಜಿ ಮೆಫೇಡೋನ್, 25.6 ಲಕ್ಷ ರೂ. ನಗದು ಹಾಗೂ ಸುಮಾರು 500 ಕೆಜಿ ರಾಸಾಯನಿಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಮಹೇಂದ್ರ ಕುಮಾರ್, ವಿಷ್ಟೋಯಿ ಸೇರಿದಂತೆ ಮೂವರು ಆರೋಪಿಗಳನ್ನು ಎನ್ಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿಷ್ಟೋಯಿ ವಿರುದ್ಧ ಈಗಾಗಲೇ ರಾಜಸ್ಥಾನ ಮತ್ತು ಗುಜರಾತ್ನಲ್ಲಿ ತಲಾ ಒಂದು ಡ್ರಗ್ಸ್ ಪ್ರಕರಣ ದಾಖಲಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಆಧರಿಸಿ ಮೈಸೂರಿನಲ್ಲಿ ದಾಳಿ ನಡೆಸಲಾಗಿದೆ ಎಂದು ಎನ್ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಮೈಸೂರಿನ ತಾಲೂಕಿನ ಯಾಂದಹಳ್ಳಿ ಸಪ್ತಮಾತೃಕೆ ಬಡಾವಣೆಯಲ್ಲಿ ಡ್ರಗ್ಸ್ ತಯಾರಿಕೆಗೆ ಬಳಸಲಾಗುತ್ತಿದ್ದ ಅಪಾರ ಪ್ರಮಾಣದ ರಾಸಾಯನಿಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಹೆಬ್ಬಾಳ ಪ್ರದೇಶದಲ್ಲಿ ಕಟ್ಟಡವನ್ನು ಬಾಡಿಗೆಗೆ ಪಡೆದು ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಗಣಪತ್ ಲಾಲ್, ಭಜನ್ ಲಾಲ್ ಹಾಗೂ ಆತನ ಪತ್ನಿ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿದೆ.
ಡ್ರಗ್ಸ್ ಜಾಲದ ಬೇರುಗಳನ್ನು ಸಂಪೂರ್ಣವಾಗಿ ಪತ್ತೆಹಚ್ಚುವ ನಿಟ್ಟಿನಲ್ಲಿ ತನಿಖೆಯನ್ನು ಇನ್ನಷ್ಟು ವಿಸ್ತರಿಸಲಾಗಿದೆ ಎಂದು ಎನ್ಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.