ನವದೆಹಲಿ: ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಅವರ ಪುಸ್ತಕ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಪ್ರಕಟಣೆಗೂ ಮುನ್ನ ಸಾಕಷ್ಟು ವಿವಾದ ಸೃಷ್ಟಿಸಿದೆ. ಈ ಅಪ್ರಕಟಿತ ಪುಸ್ತಕದಲ್ಲಿರುವ ಕೆಲವು ಅಂಶಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಎಂದು ದೆಹಲಿ ಪೊಲೀಸರು ಪ್ರಕಾಶನ ಸಂಸ್ಥೆ ಪೆಂಗ್ವಿನ್ ರ್ಯಾಂಡಮ್ ಹೌಸ್ ಇಂಡಿಯಾಕ್ಕೆ ನೋಟಿಸ್ ನೀಡಿದ್ದಾರೆ.
2020ರಲ್ಲಿ ಭಾರತ ಮತ್ತು ಚೀನಾ ನಡುವೆ ಲಡಾಖ್ನಲ್ಲಿ ನಡೆದ ಸೇನಾ ತಿಕ್ಕಾಟದ ಬಗ್ಗೆ, ನರವಣೆ ಅವರ ಅಪ್ರಕಟಿತ ಪುಸ್ತಕದಲ್ಲಿನ ಕೆಲವು ಅಂಶಗಳು ವಿವಾದ ಹುಟ್ಟು ಹಾಕಿವೆ. ಪ್ರತಿಕೆಯೊಂದರಲ್ಲಿಸಂಬಂಧಿತ ಲೇಖನವನ್ನು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಪ್ರಸ್ತಾಪಿಸಿದ್ದು ಕೋಲಾಹಲಕ್ಕೆ ಕಾರಣವಾಗಿದೆ.
ಈ ನಿಟಿನಲ್ಲಿ ದೆಹಲಿ ಪೊಲೀಸ್ ವಿಶೇಷ ಘಟಕವು, ಪೆಂಗ್ವಿನ್ ಇಂಡಿಯಾಕ್ಕೆ ನೋಟಿಸ್ ಜಾರಿ ಮಾಡಿದೆ. ಪುಸ್ತಕವನ್ನು ಅನಧಿಕೃತವಾಗಿ ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಪಾಂಗಾಂಗ್ ಸರೋವರ ಪ್ರದೇಶದಲ್ಲಿ 2020ರ ಮೇ 5ರಂದು ಭಾರತ– ಚೀನಾ ಸೈನಿಕರ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿತ್ತು. ಜನರಲ್ ನರವಣೆ ಅವರು ತಮ್ಮ ಆತ್ಮಚರಿತ್ರೆ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ಯಲ್ಲಿ ಈ ಅಂಶವನ್ನು ಪ್ರಸ್ತಾಪಿಸಿದ್ದಾರೆ.