ಕಲ್ಮಂಡು: ಪೊಬ್ರಾದಿಂದ ಕಂಡುವಿಗೆ ಪ್ರಯಾಣಿಕರನ್ನು ಹೊತ್ತು ತೆರಳುತ್ತಿದ್ದ ಬಸ್ ಒಂದು ನಿಯಂತ್ರಣ ತಪ್ಪಿ ತ್ರಿಶೂಲಿ ನದಿಗೆ ಬಿದ್ದ ಪರಿಣಾಮ, ಕನಿಷ್ಠ 18 ಮಂದಿ ಮೃತಪಟ್ಟು, 26ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಮುಂಜಾನೆ ಸಂಭವಿಸಿದೆ.
ಸೋಮವಾರ ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಪೃಥ್ವಿ ಹೆದ್ದಾರಿಯ ಗಜುರಿ ಎಂಬಲ್ಲಿ ಈ ದುರಂತ ನಡೆದಿದೆ. ಕಲ್ಮಂಡುವಿನಿಂದ ಪಶ್ಚಿಮಕ್ಕೆ ಸುಮಾರು 90 ಕಿಮೀ ದೂರದಲ್ಲಿರುವ ಈ ಭಾಗವು ಕಡಿದಾದ ತಿರುವುಗಳಿಂದ ಕೂಡಿದೆ. ಅತಿ ವೇಗವಾಗಿ ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ನದಿಗೆ ಉರುಳಿ ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಧಾವಿಸಿದ ನೇಪಾಳ ಸೇನೆ, ಸಶಸ್ತ್ರ ಪೊಲೀಸ್ ಪಡೆ ಮತ್ತು ನೇಪಾಳಿ ಪೊಲೀಸರು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇಲ್ಲಿಯವರೆಗೆ 18 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಘಟನೆಯಲ್ಲಿ ಗಾಯಗೊಂಡಿರುವ 26 ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಮೃತರ ಪೈಕಿ ನ್ಯೂಝಿಲೆಂಡ್ ನ ಓರ್ವ ಪ್ರಜೆ ಕೂಡಾ ಸೇರಿದ್ದಾನೆ ಎಂದು ಹೇಳಲಾಗಿದೆ. ಅಲ್ಲದೆ, ಗಾಯಗೊಂಡವರಲ್ಲಿ ಜಪಾನ್ ಮತ್ತು ನೆದರ್ಲೆಂಡ್ಸ್ ಮೂಲದ ಮಹಿಳಾ ಪ್ರಜೆಗಳೂ ಸೇರಿದ್ದಾರೆ ಎಂದು ಸಶಸ್ತ್ರ ಪೊಲೀಸ್ ಪಡೆಯ ವಕ್ತಾರ ಬಿಷ್ಟು ಪ್ರಸಾದ್ ತಿಳಿಸಿದ್ದಾರೆ.