ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟಗೊಂಡಿರುವ ಪ್ರಕರಣದ ಹಿನ್ನೆಲೆ ಜಮ್ಮು-ಕಾಶ್ಮೀರದ ಹಲವೆಡೆ ಭಯೋತ್ಪಾದನೆ ನಡೆಯುತ್ತಿರುವ ಸಂಬಂಧ ಹಲವೆಡೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕುಪ್ವಾರ, ಹಂದ್ವಾರ ಸೇರಿದಂತೆ 14 ಪ್ರಮುಖ ಸ್ಥಳಗಳಲ್ಲಿ ಭಯೋತ್ಪಾದನೆ ಹರಡುವಲ್ಲಿ ಕಾರ್ಯನಿರತರಾಗಿದ್ದ ಆರೋಪಿಗಳನ್ನು ಸೆರೆಹಿಡಿಯುವುದಕ್ಕಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ಶೋಧ ನಡೆಸಿತು. ಇವರೆಲ್ಲರೂ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಮೂಲಕ ಕಾರ್ಯ ಚಟುವಟಿಕೆ ಮಾಡುತ್ತಿದ್ದರು. ಅಲ್ಪಸಂಖ್ಯಾತರು ಮತ್ತು ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸುವ ಮೂಲಕ ಭಯೋತ್ಪಾದನೆ ಹರಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಯೋತ್ಪಾದನೆ ಪ್ರಕರನಕ್ಕೆ ಸಂಬಂಧಿಸಿದಂತೆ ಕುಲ್ಗಾಮ್, ಪುಲ್ವಾಮಾ, ಅನಂತನಾಗ್, ಸೋಪೋರ್ ಮತ್ತು ಜಮ್ಮು ಜಿಲ್ಲೆಗಳಲ್ಲಿ ಎನ್ಐಎ ಶೋಧ ಕಾರ್ಯಾಚರಣೆ ನಡೆಸಿದೆ. ಶೋಧಿಸಿದ ಜಾಗಗಳಿಂದ ಡಿಜಿಟಲ್ ಸಾಧನಗಳು, ಸಿಮ್ ಕಾರ್ಡ್ಗಳು ಮತ್ತು ಡಿಜಿಟಲ್ ಶೇಖರಣಾ ಸಾಧನಗಳಂತಹ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್ಐಎ ಹೇಳಿಕೆಯಲ್ಲಿ ತಿಳಿಸಿದೆ. ಭಯೋತ್ಪಾದಕ ಮತ್ತು ವಿಧ್ವಂಸಕ ಚಟುವಟಿಕೆಗಳನ್ನು ನಡೆಸುವ ಕ್ರಿಮಿನಲ್ ಪಿತೂರಿಯನ್ನು ಈ ಸಂಘಟನೆಗಳಿಗೆ ಸೇರಿದ ಯುವಕರು ಮಾಡುತ್ತಿದ್ದರು ಎಂದು ಎನ್ಐಎ ತಿಳಿಸಿದೆ. ಇವರೆಲ್ಲರಿಗೂ ಪಾಕಿಸ್ತಾನ ಮೂಲದ ಕಮಾಂಡರ್ಗಳಿದ್ದಾರೆ.
ಐಇಡಿ ನಾಶಪಡಿಸಿದ ಬಾಂಬ್ ನಿಷ್ಕ್ರಿಯ ದಳ
ಈ ನಡುವೆ ರಜೌರಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಧಾರಿತ ಸ್ಫೋಟಕ ವಸ್ತು ಕಂಡು ಬಂದಿದ್ದು, ಸ್ಥಳಕ್ಕೆ ದೌಡಾಯಿಸಿರುವ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು ಐಇಡಿಯನ್ನು ನಾಶಪಡಿಸಿದೆ ಎಂದು ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆಂದು ಶನಿವಾರ ತಿಳಿದುಬಂದಿದೆ.