ಬೆಂಗಳೂರು: ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ಎದುರಿಸುತ್ತಿರುವ ತಾಂತ್ರಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳು ಹಾಗೂ ಅವರ ವಿವಿಧ ಬೇಡಿಕೆಗಳನ್ನು ಕುರಿತು ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಡಿ.ಟಿ ಶ್ರೀನಿವಾಸ್, ಬಸವನಗೌಡ ಬಾದರ್ಲಿ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್ ನುಗ್ಗಲಿ ಅವರೂ ಹಾಜರಿದ್ದರು.
ವರ್ಗಾವಣೆ ಪ್ರಕ್ರಿಯೆ: ಶಿಕ್ಷಕರಿಗೆ ಎದುರಾಗಿರುವ ಕಡ್ಡಾಯ ಮತ್ತು ವಲಯ ವರ್ಗಾವಣೆ ಪ್ರಕ್ರಿಯೆಯನ್ನು ಕೈಬಿಟ್ಟು, ಕೇವಲ ಸಾಮಾನ್ಯ ವರ್ಗಾವಣೆ ನಡೆಸುವಂತೆ ಮನವಿ ಸಲ್ಲಿಸಿದರು.
ಪದೋನ್ನತಿ : ಸರ್ಕಾರಿ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ನಿಯಮ 32ರ ಅಡಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ (BEO) ಹಾಗೂ ತತ್ಸಮಾನ ವೃಂದದ ಹುದ್ದೆಗಳಿಗೆ ಪದೋನ್ನತಿ ನೀಡುವ ಕುರಿತು ಚರ್ಚಿಸಲಾಯಿತು.
ಸೇವಾ ಶ್ಲಾಘನೆ: ನಿಯಮ 42ರ ಅಡಿ ಕರ್ತವ್ಯ ನಿರ್ವಹಿಸುತ್ತಿರುವವರ ಸೇವೆಯನ್ನು ಪರಿಗಣಿಸಿ ಅವರಿಗೆ 'ಅಪ್ರಿಶಿಯೇಟಿಂಗ್' (Appreciating) ಮಾಡುವ ಕುರಿತಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.
ಶಿಕ್ಷಣ ಇಲಾಖೆಯ ಬೆನ್ನೆಲುಬಾಗಿರುವ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಸದಾ ಬದ್ಧವಾಗಿದೆ. ಶಿಕ್ಷಕರ ಬೇಡಿಕೆಗಳು ನ್ಯಾಯಯುತವಾಗಿದ್ದು, ಈ ಬಗ್ಗೆ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.