ಬೆಂಗಳೂರು: ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಕಳೆದೆರಡು ಮೂರು ವರ್ಷಗಳಿಂದ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿರುವುದನ್ನು ಇತ್ತೀಚಿನ ಯುಡೈಸ್ ಪ್ಲಸ್ (UDISE +) ಸಮೀಕ್ಷೆಯು ಬಹಿರಂಗಪಡಿಸಿದೆ. ಈ ಆಘಾತಕಾರಿ ಅಂಕಿ-ಅಂಶಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರ ಕೇವಲ ಆಂತರಿಕ ಭಿನ್ನಾಭಿಪ್ರಾಯ ಹಾಗೂ ಅಧಿಕಾರದ ಹಂಚಿಕೆಯಲ್ಲೇ ಮುಳುಗಿದ್ದು, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ನಿರ್ಲಕ್ಷಿಸಿದೆ ಎಂದು ಚಾಟಿ ಬಿಸಿದ್ದಾರೆ.
ಈ ವರದಿಯ ಅಧಿಕೃತ ಮಾಹಿತಿಯ ಪ್ರಕಾರ, ಕಳೆದ ಮೂರು ವರ್ಷಗಳ ಅವಧಿಯಲ್ಲಿ ಸರಿಸುಮಾರು 2.12 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳನ್ನು ತೊರೆದಿದ್ದಾರೆ. ಮೂಲಸೌಕರ್ಯ ಹಾಗೂ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವುದರಿಂದ ಬಡ ಹಾಗೂ ಮಧ್ಯಮ ವರ್ಗದ ಮಕ್ಕಳು ಶಾಲೆಯಿಂದ ದೂರ ಸರಿಯುವಂತಾಗಿದೆ. ಕೇವಲ ಕುರ್ಚಿ ಉಳಿಸಿಕೊಳ್ಳುವ ರಾಜಕೀಯಕ್ಕೆ ಆದ್ಯತೆ ನೀಡುತ್ತಿರುವ ಕಾರಣದಿಂದಾಗಿ ಇಡೀ ಶಿಕ್ಷಣ ಇಲಾಖೆ ನಿಷ್ಕ್ರಿಯಗೊಂಡಿದೆ ಎಂದು ಜೋಶಿ ಟೀಕಿಸಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದರ ಕುರಿತು ಆತಂಕ ವ್ಯಕ್ತಪಡಿಸಿರುವ ಸಚಿವರು, ಕರ್ನಾಟಕ ಸದ್ಯ ಮಾದಕ ದ್ರವ್ಯಗಳ ಅಡ್ಡೆಯಾಗಿ ಮಾರ್ಪಡುತ್ತಿದೆ ಎಂದು ಆರೋಪಿಸಿದ್ದಾರೆ. ಯುವ ಪೀಳಿಗೆ ಇಂತಹ ಸಮಾಜವಿರೋಧಿ ಜಾಲಗಳತ್ತ ಆಕರ್ಷಿತವಾಗುತ್ತಿರುವುದು ರಾಜ್ಯದ ಭವಿಷ್ಯಕ್ಕೆ ಮಾರಕವಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ಹಾಗೂ ಯುವಕರ ಹಿತರಕ್ಷಣೆ ಮಾಡುವ ಬದಲು ಕಾಂಗ್ರೆಸ್ ನಾಯಕರು ಸ್ವಹಿತಾಸಕ್ತಿಯ ರಾಜಕಾರಣದಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಪ್ರಲ್ಹಾದ ಜೋಶಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.