ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಉದ್ಯೋಗ ನೀಡುವ ನೆಪದಲ್ಲಿ ನಿರುದ್ಯೋಗಿ ಮಹಿಳೆಯರನ್ನು ದಂಧೆಗೆ ಇಳಿಸುತ್ತಿದ್ದ ಅಕ್ರಮ ಜಾಲವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಹಿರೇಕೊಟ್ನೆಕಲ್ ಗ್ರಾಮದ ಹೊರವಲಯದ ಜಮೀನುಗಳಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು.
ಈ ದಂಧೆಯ ಮಾಸ್ಟರ್ ಮೈಂಡ್ ತಾಯಪ್ಪ ಎಂಬಾತ, ಆಂಧ್ರಪ್ರದೇಶ, ತೆಲಂಗಾಣ, ಬೆಳಗಾವಿ ಹಾಗೂ ಮಹಾರಾಷ್ಟ್ರದ ಬಡ ಮಹಿಳೆಯರಿಗೆ ಉತ್ತಮ ಕೆಲಸ ಕೊಡಿಸುವ ಆಮಿಷವೊಡ್ಡಿ ಕರೆತಂದು, ಬಳಿಕ ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದನೆಂದು ತಿಳಿದುಬಂದಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಾನ್ವಿ ಪೊಲೀಸರು, ಕಿಂಗ್ಪಿನ್ ತಾಯಪ್ಪ ಸೇರಿದಂತೆ 11 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಕಾರ್ಯಾಚರಣೆಯ ವೇಳೆ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ, ಸುರಕ್ಷಿತವಾಗಿ ಸಾಂತ್ವನ ಕೇಂದ್ರಕ್ಕೆ ರವಾನಿಸಲಾಗಿದೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ. ಹೊರ ರಾಜ್ಯಗಳಿಂದ ಮಹಿಳೆಯರನ್ನು ಕರೆತರುತ್ತಿದ್ದ ಈ ಜಾಲದ ಹಿಂದೆ ಇನ್ನೂ ಯಾರ್ಯಾರ ಕೈವಾಡವಿದೆ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.