2026-03-07 06:07:41

Rahul Gandhi attacks PM Modi | ಹೆಚ್ಚುವರಿ ಪ್ರತಿಸುಂಕ ರದ್ದು ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ | Speed News Kannada

Rahul Gandhi attacks PM Modi | ಹೆಚ್ಚುವರಿ ಪ್ರತಿಸುಂಕ ರದ್ದು ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ | Speed News Kannada

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಭಾರತ ಸೇರಿದಂತೆ ವಿವಿಧ ದೇಶಗಳ ಮೇಲೆ ಹೇರಿದ್ದ ಹೆಚ್ಚುವರಿ ಪ್ರತಿಸುಂಕವನ್ನು ಅಮೆರಿಕದ ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದ ಬೆನ್ನಲ್ಲೇ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ಅವರು, 'ಪ್ರಧಾನಿ ಮೋದಿ, ಟ್ರಂಪ್‌ ಅವರೊಂದಿಗೆ ರಾಜಿ ಮಾಡಿಕೊಂಡಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಮೋದಿ ಮಾಡಿದ ದ್ರೋಹ ಈಗ ಬಹಿರಂಗವಾಗಿದೆ. ಮೋದಿ ಮತ್ತೆ ಶರಣಾಗುತ್ತಾರೆ ಎಂದು ರಾಹುಲ್ ಟೀಕಿಸಿದ್ದಾರೆ.
ವಿವಿಧ ದೇಶಗಳ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ ಪ್ರತಿಸುಂಕವನ್ನು ಅಮೆರಿಕದ ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದ ಬೆನ್ನಲ್ಲೇ, ಅಮೆರಿಕಕ್ಕೆ ಆಮದಾಗುವ ಎಲ್ಲ ವಸ್ತುಗಳ ಮೇಲೆ ಮುಂದಿನ ಐದು ತಿಂಗಳವರೆಗೆ ಜಾಗತಿಕವಾಗಿ ಶೇ. 10ರಷ್ಟು ಸುಂಕ ವಿಧಿಸಲಾಗುವುದು ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರಕಟಿಸಿದ್ದಾರೆ.
1974ರ ವ್ಯಾಪಾರ ಕಾಯ್ದೆಯ ಸೆಕ್ಷನ್‌ 122ರ ಅಡಿಯಲ್ಲಿ ಈ ಆದೇಶ ಹೊರಡಿಸಲಾಗುವುದು ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮುಂದಿನ ಐದು ತಿಂಗಳವರೆಗೆ ಎಲ್ಲ ದೇಶಗಳ ಮೇಲೆ ಶೇ. 15ರವರೆಗೆ ಸುಂಕ ವಿಧಿಸಲು ಈ ಕಾಯ್ದೆಯು ಅಧ್ಯಕ್ಷರಿಗೆ ಅವಕಾಶ ನೀಡುತ್ತದೆ. ನಮ್ಮ ಬಳಿ ಅತ್ಯುತ್ತಮ ಪರ್ಯಾಯ ಮಾರ್ಗಗಳಿವೆ. ಇವು ಹೆಚ್ಚಿನ ಹಣವನ್ನು ತರಬಹುದು. ಇದರಿಂದ ನಾವು ಇನ್ನಷ್ಟು ಬಲಿಷ್ಠರಾಗುತ್ತೇವೆ ಎಂದು ಅವರು ಹೇಳಿದ್ದಾರೆ.
ಇತರ ದೇಶಗಳು ಮತ್ತು ಕಂಪನಿಗಳ ಅನ್ಯಾಯದ ವ್ಯಾಪಾರ ನೀತಿಗಳಿಂದ ನಮ್ಮ ದೇಶವನ್ನು ರಕ್ಷಿಸಲು, ನಮ್ಮ ಆಡಳಿತವು ಸೆಕ್ಷನ್‌ 301ರ ಅಡಿಯಲ್ಲಿ ತನಿಖೆ ನಡೆಸಲಿದೆ. ಸುಪ್ರೀಂ ಕೋರ್ಟ್‌ ತೀರ್ಪು ನಮಗೆ ತೀವ್ರ ನಿರಾಸೆ ಉಂಟು ಮಾಡಿದೆ. ಈ ತೀರ್ಪು ವಿದೇಶಿ ಹಿತಾಸಕ್ತಿಗಳಿಂದ ಪ್ರಭಾವಿತವಾಗಿದೆ. ನಮ್ಮ ದೇಶಕ್ಕೆ ಯಾವುದು ಸರಿಯೋ ಅದನ್ನು ಮಾಡುವ ಧೈರ್ಯ ನ್ಯಾಯಮೂರ್ತಿಗಳು ತೋರಿಲ್ಲ. ಇದರಿಂದ ಅವರ ಬಗ್ಗೆ ನಿಜಕ್ಕೂ ನಾಚಿಕೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಭಾರತ ಹಾಗೂ ಅಮೆರಿಕದ ಮಧ್ಯಂತರ ವ್ಯಾಪಾರ ಒಪ್ಪಂದ ಮುಂದುವರೆಯುತ್ತದೆ ಎಂದೂ ಟ್ರಂಪ್‌ ಸ್ಪಷ್ಟಪಡಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.