ಬೆಂಗಳೂರು: ಸುಡು ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿಗೆ ಕೊನೆಗೂ ವರುಣರಾಯ ಕೃಪೆ ತೋರಿದ್ದಾನೆ. ಇಂದು ಸಂಜೆಯಿಂದಲೇ ನಗರದಾದ್ಯಂತ ಭಾರಿ ಮಳೆಯಾಗುತ್ತಿದೆ. ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿವಿಧ ಬಾಗಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದ್ದು, ರಸ್ತೆಗಳಲ್ಲಿ ನೀರು ನಿಂತು ವಾಹನ ಚಲಾಯಿಸಲು ಅಡ್ಡಿಯಾಗಿದೆ. ನದಿಯಂತಾಗಿದ್ದವು. ವಾಹನ ಸವಾರರು ಪರದಾಡುವಂತಾಗಿದೆ. ರಸ್ತೆ ಬದಿಗಳಲ್ಲೇ ಬೈಕ್ ನಿಲ್ಲಿಸಿ ಬಸ್ ನಿಲ್ದಾಣ, ಅಂಗಡಿ ಮುಂಗಟ್ಟುಗಳ ಅಡಿಯಲ್ಲಿ ಆಶ್ರಯಪಡೆದಿದ್ದಾರೆ.
ವಿಧಾನಸೌಧ, ರಾಜಾಜಿ ನಗರ, ವಿಜಯನಗರ, ಮೆಜೆಸ್ಟಿಕ್, ಶಾಂತಿನಗರ, ಜಯನಗರ, ಜೆ.ಪಿ. ನಗರ, ಬನಶಂಕರಿ,ವಸಂತನಗರ, ಸಿಟಿ ಮಾರ್ಕೆಟ್, ಕೋಣನಕುಂಟೆ, ಹೆಬ್ಬಾಳ, ಯಲಹಂಕ, ನಾಗರಬಾವಿ, ಮೂಡಲಪಾಳ್ಯ, ಗಿರಿನಗರ, ಬಸವನಗುಡಿ ಸದಾಶಿವನಗರ, ರಾಜಾಜಿನಗರ, ವಿಜಯನಗರ, ಚಂದ್ರಾಲೇಔಟ್, ಇಂದಿರಾ ನಗರ, ಲಗ್ಗೆರೆ, ಮಹಾಲಕ್ಷ್ಮೀ ಲೇಔಟ್, ಸುಬ್ರಮಣ್ಯ ನಗರ, ಮೆಜೆಸ್ಟಿಕ್, ಶೇಷಾದ್ರಿಪುರಂ, ಮಲ್ಲೇಶ್ವರಂ, ಸೇರಿದಂತೆ ಬಹುತೇಕ ಭಾಗದಲ್ಲಿ ಮಳೆಯಾಗಿದೆ.
ಕೆಆರ್ ಸರ್ಕಲ್ ಅಂಡರ್ ಪಾಸ್ ಬಂದ್:
ಮುನ್ನೆಚ್ಚರಿಕೆ ಕ್ರಮವಾಗಿ ಕೆ.ಆರ್. ಸರ್ಕಲ್ ಅಂಡರ್ ಪಾಸ್ ಬಂದ್ ಮಾಡಲಾಗಿದೆ. ಮಳೆ ಹಿನ್ನೆಲೆ ನೀರು ಸಂಗ್ರಹವಾಗುವ ಸಾಧ್ಯತೆಯಿದ್ದು, ಬ್ಯಾರಿಕೇಡ್ ಹಾಕುವ ಮೂಲಕ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಇಂದು ಬೆಂಗಳೂರಿಗೆ ಹವಾಮಾನ ಇಲಾಖೆ ಎಲ್ಲೋ ಆಲರ್ಟ್ ಘೋಷಿಸಿತ್ತು. ಮಳೆಯ ಅಬ್ಬರಕ್ಕೆ ಟೌನ್ ಹಾಲ್ ಸೇರಿದಂತೆ ಅನೇಕ ರಸ್ತೆಗಳು ಕೆರೆಯಂತೆ ಗೋಚರಿಸುತ್ತಿದ್ದವು.
ಮುಂದಿನ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ನಾಳೆಯಿಂದ ನಾಲ್ಕು ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.