ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಕರ್ನಾಟಕ ವಿಧಾನಸಭೆಯಿಂದ ಆಯ್ಕೆಯಾಗಬೇಕಾದ ರಾಜ್ಯಸಭೆಯ ಮೂರು ಸ್ಥಾನಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಕ್ತಾರ ಪವನ್ ಖೇರಾ, ಮನ್ಸೂರ್ ಅಲಿಖಾನ್ ಅವರ ಹೆಸರನ್ನು ಕಾಂಗ್ರೆಸ್ ಅಂತಿಮಗೊಳಿಸಿತ್ತು.
ಖರ್ಗೆಯವರು ಪ್ರಸ್ತುತ ರಾಜ್ಯಸಭೆಯ ಪ್ರತಿಪಕ್ಷದ ನಾಯಕರಾಗಿದ್ದು, ಕಳೆದ ಬಾರಿಯೂ ಕರ್ನಾಟಕದಿಂದಲೇ ಆಯ್ಕೆಯಾಗಿದ್ದರು. ರಾಜ್ಯಸಭೆ ಉಪಸಭಾಪತಿಯಾಗಿದ್ದ ಹಾಗೂ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಪುತ್ರ ಮನ್ಸೂರ್ ಖಾನ್ ಅವರಿಗೆ ಎಐಸಿಸಿ ಅವಕಾಶ ಕಲ್ಪಿಸಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ನಾರಾಯಣ, ಈರಣ್ಣ ಕಡಾಡಿ ಅವರ ಅವಧಿ ಮುಕ್ತಾಯವಾಗಲಿದ್ದು, ಕರ್ನಾಟಕದಿಂದ ಆಯ್ಕೆಯಾಗಬೇಕಾದ ರಾಜ್ಯಸಭೆಯ ಈ ನಾಲ್ಕು ಸ್ಥಾನಗಳು ಸೇರಿ ರಾಜ್ಯಸಭೆಯ ಒಟ್ಟು 24 ಸ್ಥಾನಗಳಿಗೆ ಇದೇ 18ರಂದು ಚುನಾವಣೆ ನಿಗದಿಯಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ಗೆ ಮೂರು ಹಾಗೂ ಬಿಜೆಪಿಗೆ ಒಂದು ಸ್ಥಾನ
ಸಿಗಲಿದೆ.
ನಾಮಪತ್ರ ಸಲ್ಲಿಸಲು ಜೂನ್ 8 ಕೊನೆ ದಿನವಾಗಿದೆ. ನಾಮಪತ್ರಗಳ ಪರಿಶೀಲನೆ 9ಕ್ಕೆ ನಡೆಯಲಿದ್ದು, ನಾಮಪತ್ರ ಹಿಂದಕ್ಕೆ ಪಡೆಯಲು 10 ಕೊನೆ ದಿನ. 18ರಂದು ಮತದಾನ ನಡೆಯಲಿದೆ. ಮತಗಳ ಎಣಿಕೆ ಸಂಜೆ 5ಕ್ಕೆ ನಡೆಯಲಿದ್ದು ಅಂದೇ ಫಲಿತಾಂಶ ಪ್ರಕಟವಾಗಲಿದೆ.