ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಪಟ್ಟಂತೆ ದೊಡ್ಡವರ ವಿರುದ್ಧ ಹೋರಾಟ ನಡೆಸುತ್ತಿರುವ ನನ್ನ ತಂದೆ ಸ್ನೇಹಮಯಿ ಕೃಷ್ಣ ಅವರನ್ನು ಎಲ್ಲಿಗೆ ಕರೆದೊಯ್ದಿದ್ದಾರೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡುತ್ತಿಲ್ಲ ಅವರ ಪುತ್ರ ವಿವೇಕ್ ಆಕ್ರೋಶ ಕಳವಳ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಅವರ ಜೀವಕ್ಕೆ ಅಪಾಯವಾದರೆ ಸರ್ಕಾರವೇ ನೇರ ಹೊಣೆ ಎಂದೂ ಅವರು ದೂರಿದ್ದಾರೆ.
ನ್ಯಾಯಾಲಯದ ಆವರಣದಲ್ಲೇ ನಡೆದ ಹೈಡ್ರಾಮಾ:
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದ ವಿಚಾರಣೆ ಇತ್ತು. ಪ್ರಕರಣದ ವಿಚಾರಣೆ ಮುಗಿಸಿ ನ್ಯಾಯಾಲಯದಿಂದ ಹೊರಬರುತ್ತಿದ್ದಂತೆ ಸಿಸಿಬಿ ಅಧಿಕಾರಿಗಳ ತಂಡ ಸ್ನೇಹಮಯಿ ಕೃಷ್ಣ ಅವರನ್ನು ಇನೋವಾ ಕಾರಿನಲ್ಲಿ ಬಲವಂತವಾಗಿ ಕರೆದೊಯ್ದಿದೆ. ಈ ವೇಳೆ ಅವರ ಜೊತೆಗಿದ್ದ ಪುತ್ರ ವಿವೇಕ್ ಅವರಿಗೂ ಯಾವುದೇ ಮಾಹಿತಿ ನೀಡಿಲ್ಲ.
ತಂದೆಯನ್ನು ಕರೆದೊಯ್ದ ಬೆನ್ನಲ್ಲೇ ಶಾಂತಿನಗರದಲ್ಲಿರುವ ಸಿಸಿಬಿ ಮುಖ್ಯ ಕಚೇರಿಗೆ ಧಾವಿಸಿದ ವಿವೇಕ್ ಅವರಿಗೆ ಅಲ್ಲಿಯೂ ತಂದೆ ಕುರಿತು ನಿಖರ ಮಾಹಿತಿ ಸಿಕ್ಕಿಲ್ಲ. ಪೊಲೀಸರು ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆಯೇ ಎಂಬ ಆತಂಕ ಕಾಡುತ್ತಿದೆ ಎಂದು ವಿವೇಕ್ ಅಳಲು ತೋಡಿಕೊಂಡಿದ್ದಾರೆ.
ಮತ್ತೊಂದು ಕಡೆ ಮೈಸೂರಿನಲ್ಲಿರುವ ಕೃಷ್ಣ ಅವರ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಸರ್ಚ್ ವಾರಂಟ್ ತೋರಿಸಿ ಮನೆಯಲ್ಲಿ ಶೋಧ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.