ಬೆಂಗಳೂರು: ಎಲ್ಲ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಘನ ತ್ಯಾಜ್ಯ ನಿರ್ವಹಣೆಯಲ್ಲಿ ಕರ್ನಾಟಕವನ್ನು ದೇಶದಲ್ಲೇ ಒಂದು "ಮಾದರಿ ರಾಜ್ಯ"ವನ್ನಾಗಿ ಮಾಡಲು ಶ್ರಮಿಸಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಕರೆ ನೀಡಿದರು.
ಇಂದು ವಿಧಾನಸೌಧದಲ್ಲಿ ಘನ ತ್ಯಾಜ್ಯ ನಿರ್ವಹಣೆ ನಿಯಮಗಳು-2026ರ ಅನುಷ್ಠಾನ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಮಹತ್ವದ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಆದೇಶದಂತೆ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ, ಘನ ತ್ಯಾಜ್ಯ ನಿರ್ವಹಣೆ ನಿಯಮಗಳು-2026ರ ಕಟ್ಟುನಿಟ್ಟಿನ ಜಾರಿಗೆ ಸೂಚನೆ ನೀಡಲಾಗಿದೆ ಎಂದರು.
ಕೇಂದ್ರ ಸರ್ಕಾರವು 5 ಜವಾಬ್ದಾರಿಯುತ ಕಾರ್ಯದರ್ಶಿಗಳ ರಾಜ್ಯಗಳಿಗೆ ಈ ನಿಯಮಗಳ ಯಶಸ್ವಿ ಅನುಷ್ಠಾನದ ಹೊಣೆಗಾರಿಕೆಯನ್ನು ನೀಡಿದೆ. ಆದ್ದರಿಂದ, ಈ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸದೆ ಎಲ್ಲಾ ಹಂತಗಳಲ್ಲಿಯೂ ಸಂಪೂರ್ಣ ಅರಿವು ಮೂಡಿಸಬೇಕು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಾರ್ವಜನಿಕರು ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದರು.
ಕಸದ 4 ರೀತಿಯ ವರ್ಗೀಕರಣ ಮತ್ತು ವೈಜ್ಞಾನಿಕ ವಿಲೇವಾರಿ:
ಮನೆಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ ಸಾವಿರಾರು ಟಿಪಿಡಿ ಘನ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸದಿದ್ದಲ್ಲಿ ಅದು ಹಳೆಯ ತ್ಯಾಜ್ಯ ಆಗಿ ಮಾರ್ಪಟ್ಟು ಪರಿಸರಕ್ಕೆ ಭಾರಿ ಹಾನಿ ಉಂಟುಮಾಡುತ್ತದೆ. ಆದ್ದರಿಂದ, ಮನೆ-ಮನೆ ಕಸ ಸಂಗ್ರಹಣೆಗೆ ಹೊಸ ನಿಯಮಗಳ ಪ್ರಕಾರ 4 ರೀತಿಯ ವಿಂಗಡಣೆಯನ್ನು ಜಾರಿಗೆ ತರಬೇಕು. ವಿಂಗಡಿಸಿದ ಕಸವನ್ನು ಪ್ರತ್ಯೇಕವಾಗಿ ಸಂಸ್ಕರಣಾ ಘಟಕಗಳಿಗೆ ತಲುಪಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಸಮಗ್ರ ಮೇಲ್ವಿಚಾರಣಾ ತಂತ್ರಜ್ಞಾನ ಹಾಗೂ ಮ್ಯಾಪಿಂಗ್ ವ್ಯವಸ್ಥೆ ರೂಪಿಸಬೇಕು ಎಂದು ತಿಳಿಸಿದರು.
ಮಹಿಳಾ ಸ್ವ-ಸಹಾಯ ಗುಂಪುಗಳ ಸಬಲೀಕರಣ:
ಈಗಾಗಲೇ ಸುಮಾರು 4,000 ಗ್ರಾಮ ಪಂಚಾಯತ್ಗಳಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳನ್ನು ‘ಸ್ವಚ್ಛತಾ ವಾಹಿನಿ'ಗಳನ್ನಾಗಿ ಯಶಸ್ವಿಯಾಗಿ ನಿಯೋಜಿಸಲಾಗಿದೆ. ಇದನ್ನು ರಾಜ್ಯದ ಎಲ್ಲಾ 6,000 ಗ್ರಾಮ ಪಂಚಾಯತ್ಗಳಿಗೂ ವಿಸ್ತರಿಸಿ, ಅವರಿಗೆ ಘನ ತ್ಯಾಜ್ಯ ನಿರ್ವಹಣೆ ನಿಯಮಗಳ ಬಗ್ಗೆ ಸೂಕ್ತ ತರಬೇತಿ ನೀಡಬೇಕು. ಸರ್ವೋಚ್ಚ ನ್ಯಾಯಾಲಯವು ಈ ನಿಯಮಗಳ ಪಾಲನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯಮಗಳನ್ನು ಸರಿಯಾಗಿ ಪಾಲಿಸದಿದ್ದರೆ ಸರ್ಕಾರ ಮತ್ತು ಸಾರ್ವಜನಿಕ ವಲಯಕ್ಕೆ ಬೀಳಬಹುದಾದ ದಂಡವನ್ನು ತಪ್ಪಿಸಲು ಇದು ಅನಿವಾರ್ಯವಾಗಿದೆ ಎಂದು ಹೇಳಿದರು.
ವಿಶೇಷ ತ್ಯಾಜ್ಯ ನಿರ್ವಹಣೆ ಮತ್ತು ‘ವೇಸ್ಟ್ ಟು ಎನರ್ಜಿ:
ಪ್ಲಾಸ್ಟಿಕ್ ಬಾಟಲ್ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ ಮತ್ತು ಬಯೋ-ಮೆಡಿಕಲ್ ತ್ಯಾಜ್ಯಗಳನ್ನು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಎಂಪಾನಲ್ ಆಗಿರುವ ಅಧಿಕೃತ ಏಜೆನ್ಸಿಗಳ ಮೂಲಕ ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಈ ಕ್ಷೇತ್ರಕ್ಕೆ ಖಾಸಗಿ ಉದ್ಯಮಿಗಳನ್ನು ಒಳಗೊಂಡು ‘Waste to Energy’ ಮತ್ತು ‘Waste to Wealth’ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕೈಗಾರಿಕಾ ಅಸೋಸಿಯೇಷನ್ಗಳೊಂದಿಗೆ ಚರ್ಚಿಸಿ ವಿಕೇಂದ್ರೀಕೃತ ತ್ಯಾಜ್ಯ ವಿನಿಮಯಕ್ಕೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಹಸಿ ಕಸ ಮತ್ತು ದ್ರವ ತ್ಯಾಜ್ಯ ನಿರ್ವಹಣೆ:
ಗೋಶಾಲೆಯಂತಹ ಸ್ಥಳಗಳಲ್ಲಿ ಹಸಿ ಕಸವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ದ್ರವ ತ್ಯಾಜ್ಯದ ನಿರ್ವಹಣೆಗಾಗಿ ಒಳಚರಂಡಿ ನೀರಿನ ಮರುಬಳಕೆ ನೀತಿಯನ್ನು ಬಳಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಸೂಕ್ತ ತರಬೇತಿ ಮತ್ತು ತಂತ್ರಜ್ಞಾನವನ್ನು ಒದಗಿಸಬೇಕು. ಕೈಗಾರಿಕೆಗಳಲ್ಲಿ ಸಂಸ್ಕರಿಸಿದ ನೀರನ್ನು ಮಾತ್ರ ಬಳಸುವಂತೆ ನಿಯಮ ರೂಪಿಸಿ, ಕುಡಿಯುವ ನೀರನ್ನು ಕೈಗಾರಿಕಾ ಉದ್ದೇಶಗಳಿಗೆ ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಬೇಕು.
ಪರ್ಯಾಯ ಹಸಿರು ಉತ್ಪನ್ನಗಳ ಪ್ರೋತ್ಸಾಹ:
ಪರಿಸರಕ್ಕೆ ಮಾರಕವಾಗಿರುವ ವಸ್ತುಗಳ ಬಳಕೆಯನ್ನು ಕಡಿಮೆ ಮಾಡಲು, ಪರ್ಯಾಯ ಹಸಿರು ಉತ್ಪನ್ನಗಳನ್ನು ಉತ್ಪಾದಿಸುವ ಉದ್ಯಮಿಗಳನ್ನು ಪ್ರೋತ್ಸಾಹಿಸಬೇಕು. ಮಾರುಕಟ್ಟೆಯಲ್ಲಿ ಪರಿಸರ ಸ್ನೇಹಿ ಉತ್ಪನ್ನಗಳು ಸುಲಭವಾಗಿ ದೊರೆಯುವಂತೆ ಮಾಡಬೇಕು. ಜತೆಗೆ, ಕಸದಿಂದ ತಯಾರಿಸಿದ ಉಪ ಉತ್ಪನ್ನಗಳನ್ನು ಮಾರಾಟ ಮಾಡಲು ವ್ಯವಸ್ಥಿತ ಮಾರುಕಟ್ಟೆ ಮತ್ತು ಸೂಕ್ತ ಬ್ರ್ಯಾಂಡಿಂಗ್ ವ್ಯವಸ್ಥೆಯನ್ನು ಕಲ್ಪಿಸಬೇಕು.
ಸಾರ್ವಜನಿಕ ಜಾಗೃತಿ ಮತ್ತು ಶಾಲಾ ವಿದ್ಯಾರ್ಥಿಗಳ ಭಾಗಿತ್ವ: ಹಳ್ಳಿಗಳಲ್ಲಿ ಕೈಗೊಳ್ಳುವ ಸ್ವಚ್ಛತಾ ಕಾರ್ಯಕ್ರಮಗಳನ್ನು ಜನಸಾಮಾನ್ಯರ ಹಬ್ಬದಂತೆ ಆಚರಿಸುವ ಮೂಲಕ ಸಾರ್ವಜನಿಕರಲ್ಲಿ ಕಸ ವಿಂಗಡಣೆಯ ಬಗ್ಗೆ ಜಾಗೃತಿ ಮೂಡಿಸಬೇಕು. ಇದಕ್ಕಾಗಿ ತಳಮಟ್ಟದ ಐಇಸಿ ಚಟುವಟಿಕೆಗಳನ್ನು ತೀವ್ರಗೊಳಿಸಬೇಕು. ವಿಶೇಷವಾಗಿ ಶಾಲಾ ಹಂತದಲ್ಲಿಯೇ ಡಿಜಿಟಲ್ ಮಾಧ್ಯಮಗಳ ಮೂಲಕ ಸ್ವಚ್ಛತೆಯ ಬಗ್ಗೆ ತರಬೇತಿ ನೀಡಿ, ವಿದ್ಯಾರ್ಥಿಗಳನ್ನು ಈ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಉನ್ನತ ಮಟ್ಟದ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತರಾದ ಫೌಜಿಯಾ ತರನ್ನುಮ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಡಾ. ಸಮೀರ್ ಶುಕ್ಲಾ, ಪಂಚಾಯತ್ ರಾಜ್ ಕಾರ್ಯದರ್ಶಿ ರಂದೀಪ್ ಡಿ. ಮತ್ತು ಇತರರು ಉಪಸ್ಥಿತರಿದ್ದರು.