ನವದೆಹಲಿ: ಸಮಾಜವಾದಿ ಪಕ್ಷದ ಸಂಸ್ಥಾಪಕ, ಉತ್ತರಪ್ರದೇಶಮಾಜಿ ಮುಖ್ಯಮಂತ್ರಿ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರ ಪುತ್ರ ಪ್ರತೀಕ್ ಯಾದವ್ ಇಂದು ಬೆಳಗ್ಗೆ ಲಕ್ನೋದಲ್ಲಿ ನಿಧನರಾಗಿದ್ದಾರೆ. ಅವರಿಗೆ 38 ವರ್ಷ ವಯಸ್ಸಾಗಿತ್ತು. ಅವರು ದೀರ್ಘಕಾಲದಿಂದ ಶ್ವಾಸಕೋಶ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದರು. ಮತ್ತೆ ಆರೋಗ್ಯ ಹದಗೆಟ್ಟಿದ್ದರಿಂದ ಲಕ್ನೋ ಸಿವಿಲ್ ಆಸ್ಪತ್ರೆಗೆ ಕರೆತರಲಾಗಿದ್ದುತ್ತು. ಆದರೆ ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಪ್ರತೀಕ್ ಯಾದವ್ ಅವರ ದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಹೀಗಾಗಿ ಅವರ ಸಾವಿನ ನಿಖರವಾದ ಕಾರಣವನ್ನು ಪತ್ತೆ ಹಚ್ಚಲು ಮರಣೋತ್ತರ ಪರೀಕ್ಷೆ ನಡೆಯಲಿದೆ.
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಮಲಸಹೋದರರೂ ಹೌದು. ಇವರು ಪತ್ನಿ ಬಿಜೆಪಿ ನಾಯಕಿ ಅಪರ್ಣಾ ಯಾದವ್, ಇಬ್ಬರು ಮಕ್ಕಳು ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಪ್ರತೀಕ್ ದೀರ್ಘಕಾಲದಿಂದ ಶ್ವಾಸಕೋಶ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದ ಪ್ರತೀಕ್ ಯಾದವ್ ಅವರು ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಚಿಕಿತ್ಸೆ ಪಡೆಯುತ್ತಿದ್ದರು.
ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಎರಡನೇ ಪತ್ನಿ ಸಾಧನಾ ಅವರ ಪುತ್ರನಾಗಿರುವ ಪ್ರತೀಕ್ ಯುಕೆಯ ಲೀಡ್ಸ್ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿ ಪಡೆದಿದ್ದು, ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದರು. ಫಿಟ್ನೆಸ್ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಿದ್ದ ಅವರು 2012ರ ಸೆಪ್ಟೆಂಬರ್ ನಲ್ಲಿ ಅಂತಾರಾಷ್ಟ್ರೀಯ ಮೆಚ್ಚುಗೆ ಪಡೆದ ದೇಹದಾರ್ಢ್ಯ ವೆಬ್ಸೈಟ್ನ "ತಿಂಗಳ ಅಂತಾರಾಷ್ಟ್ರೀಯ ರೂಪಾಂತರ" ದಲ್ಲಿ ಕಾಣಿಸಿಕೊಂಡಿದ್ದರು.
ಮುಲಾಯಂ ಕುಟುಂಬದಲ್ಲಿ ಬಹುತೇಕ ಎಲ್ಲರೂ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದರೂ ಪ್ರತೀಕ್ ರಾಜಕೀಯದಿಂದ ದೂರವೇ ಉಳಿದಿದ್ದರು. 2014ರ ಚುನಾವಣೆಯಲ್ಲಿ ಸ್ಪರ್ಧಿಸಲು ಒತ್ತಡವಿದ್ದರೂ ಅವರು ದೂರವೇ ಉಳಿದಿದ್ದರು.