ಚಿಕ್ಕೋಡಿ: ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮೊದಲು ಸಿದ್ದರಾಮಯ್ಯನವರು ಅಹಿಂದ ಕುರಿತು ಮಾತನಾಡಿ ಅಹಿಂದ ವರ್ಗಕ್ಕೆ ನ್ಯಾಯ ನೀಡುವ ಭರವಸೆ ಮೂಡಿಸಿದ್ದರು. ಆದರೆ, ಕಳೆದ 3 ವರ್ಷಗಳಲ್ಲಿ ಕರ್ನಾಟಕದಲ್ಲಿ ಏನಾಗಿದೆ ಎಂದು ನಾವು ಚಿಂತಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬಿಜೆಪಿ ಚಿಕ್ಕೋಡಿ ಜಿಲ್ಲೆ ವತಿಯಿಂದ ಯಕ್ಸಾಂಬಾ ಪಟ್ಟಣದಲ್ಲಿ ಇಂದು ನಡೆದ ವಿಬಿ ಜಿ ರಾಮ್ ಜಿ ಯೋಜನೆ ಕುರಿತ ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು. ರಾಜ್ಯ ಸರಕಾರವು ಕಳೆದ ಮೂರು ವರ್ಷಗಳಲ್ಲಿ ಅಭಿವೃದ್ಧಿಗಾಗಿ ಒಂದೇ ಒಂದು ರೂಪಾಯಿಯನ್ನೂ ವಿನಿಯೋಗ ಮಾಡಿಲ್ಲ ಎಂದು ಅವರು ಆಕ್ಷೇಪಿಸಿದರು.
ಬಡವರು, ರೈತರು, ಯುವಜನರು ಮಾತ್ರವಲ್ಲ; ಆಡಳಿತ ಪಕ್ಷದ ಎಲ್ಲ ಶಾಸಕರೂ ಮುಖ್ಯಮಂತ್ರಿಗಳ ವಿರುದ್ಧ ಧ್ವನಿ ಎತ್ತಲಾರಂಭಿಸಿದ್ದಾರೆ. ಇಂಥ ಪರಿಸ್ಥಿತಿ ಕರ್ನಾಟಕದ ರಾಜಕೀಯದಲ್ಲಿ ಯಾವತ್ತೂ ಬಂದಿರಲಿಲ್ಲ ಎಂದು ಟೀಕಿಸಿದರು. ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿವೃದ್ಧಿಗೆ ಒಂದು ರೂಪಾಯಿಯನ್ನೂ ಕೊಡದ ಕಾರಣ ಆಡಳಿತ ಪಕ್ಷದ ಶಾಸಕರು ಅಸಮಾಧಾನದಿಂದಿದ್ದಾರೆ ಎಂದು ತಿಳಿಸಿದರು. ಇದು ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರದ ದೊಡ್ಡ ಸಾಧನೆ ಎಂದು ನುಡಿದರು.
ಪಂಚ ಗ್ಯಾರಂಟಿ ಬಗ್ಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮಾತನಾಡುತ್ತಿದ್ದರು. ಆದರೆ, ಗ್ಯಾರಂಟಿಗೆ ಸರಕಾರದ ಬಳಿ ಹಣ ಉಳಿದಿಲ್ಲ. ಇದರಿಂದ ಪ್ರತಿ ಗ್ರಾಮದಲ್ಲೂ ಶರಾಬು ಅಂಗಡಿಗಳನ್ನು ತೆರೆಯುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಕುರಿತು ಮುಖ್ಯಮಂತ್ರಿಗಳು ಮಾತನಾಡುತ್ತಾರೆ. ಆದರೆ, ಕಳೆದ 3 ವರ್ಷಗಳಲ್ಲಿ ಬಡವರಿಗಾಗಿ ಒಂದು ಹೊಸ ಯೋಜನೆಯನ್ನೂ ಮುಖ್ಯಮಂತ್ರಿಗಳು ಪ್ರಕಟಿಸಿ ಅನುಷ್ಠಾನಕ್ಕೆ ತಂದಿಲ್ಲ ಎಂದು ದೂರಿದರು.