ಬಾಗಲಕೋಟೆ: ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಡಿಯಿಂದ ಇಂದಿನಿಂದ ಫೆ.24ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಬಾಗಲಕೋಟೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ ಆದೇಶ ಹೊರಡಿಸಿದ್ದಾರೆ.
ಬಾಗಲಕೋಟೆ ನಗರ, ನವನಗರ, ವಿದ್ಯಾಗಿರಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಆಯುಧಗಳನ್ನು ಹಿಡಿದುಕೊಂಡು ತಿರುಗಾಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಅವಧಿಯಲ್ಲಿ ಪ್ರತಿಭಟನೆ ಸಭೆ, ಸಮಾರಂಭ, ಮಾಡುವುದನ್ನು ನಿಷೇಧಿಸಲಾಗಿದೆ. ಶಾಂತಿಗೆ ಧಕ್ಕೆ ತರುವಂತಹ ಯಾವುದೇ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ನಿನ್ನೆ ಬಾಗಲಕೋಟೆ ನಗರದಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಲಾಗಿತ್ತು. ಮೆರವಣಿಗೆಯು ಪಂಕಾ ಮಸೀದಿ ಮಾರ್ಗದಲ್ಲಿ ಸಾಗುವಾಗ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಕಲ್ಲು ತೂರಾಟದಲ್ಲಿ ಜಿಲ್ಲಾ ಎಸ್ ಪಿ ಸಿದ್ದಾರ್ಥ ಗೋಯಲ್ ಅವರ ತಲೆಗೆ ಗಾಯವಾಗಿದೆ.
ಪೊಲೀಸ್ ಬಿಗಿ ಬಂದೋಬಸ್ತ್ ನಡುವೆ ಮೆರವಣಿಗೆ ನಡೆದಿದ್ದರೂ ಕಲ್ಲು ತೂರಾಟ ನಡೆದಿದೆ.