ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ಸಚಿವ ಡಿ. ಸುಧಾಕರ್ ಅವರಿಗೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಸಚಿವರು ಸದ್ಯ ವೆಂಟಿಲೇಟರ್ ಮತ್ತು ಎಕ್ಮೋ ಬೆಂಬಲದೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.ಸಚಿವರಿಗೆ ಇನ್ನೂ ಪ್ರಜ್ಞೆ ಬಂದಿಲ್ಲ. ಬ್ರೈನ್ ನಾರ್ಮಲ್ ಸ್ಥಿತಿಗೆ ಬರಲು ಸಮಯ ಹಿಡಿಯಲಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆದಾಗ್ಯೂ, ವೈದ್ಯರು ಸಚಿವರ ಚಿಕಿತ್ಸೆಯ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ.ಸಚಿವರ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಗೃಹಸಚಿವ ಡಾ. ಜಿ. ಪರಮೇಶ್ವರ್ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಭೇಟಿ ನೀಡಿದ್ದಾರೆ.
ಸಚಿವರ ಕುಟುಂಬಸ್ಥರಿಗೆ ಗಣ್ಯರು ಧೈರ್ಯ ತುಂಬಿದ್ದಾರೆ. ಸಚಿವರ ಆರೋಗ್ಯದ ಬಗ್ಗೆ ಸರ್ಕಾರ ಮಾಹಿತಿ ಮುಚ್ಚಿಡುತ್ತಿದೆ ಎಂಬ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹಸಚಿವ ಡಾ. ಜಿ. ಪರಮೇಶ್ವರ್, "ಆರೋಗ್ಯ ವಿಚಾರದಲ್ಲಿ ಮುಚ್ಚಿಡುವುದು ಏನೂ ಇಲ್ಲ, ಕುಮಾರಸ್ವಾಮಿಯವರ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.ಸಚಿವರು ಶೀಘ್ರ ಗುಣಮುಖರಾಗಿ ಮರಳಿ ಬರಲಿ ಎಂದು ಗಣ್ಯರು ಮತ್ತು ಅಭಿಮಾನಿಗಳು ಹಾರೈಸುತ್ತಿದ್ದಾರೆ