ಬೆಂಗಳೂರು: ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ರಾಜೀನಾಮೆಗೆ ಅಗ್ರಹಿಸಿ ವಿಧಾನಸೌಧದಲ್ಲಿ ಮೇಲ್ಮನೆ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಒಂದು ಕಡು ಭ್ರಷ್ಟ ಸರ್ಕಾರವಾಗಿದ್ದು, ಈ ಬಗ್ಗೆ ಜನರು ಬೀದಿಗಳಲ್ಲೇ ಚರ್ಚೆ ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರು ಭ್ರಷ್ಟಾಚಾರದಲ್ಲಿ ಸಿಲುಕಿದ್ದಾರೆ. ಈ ಪ್ರಕರಣದಲ್ಲಿ ಸಚಿವರ ಪುತ್ರ ಹಾಗೂ ಅಧಿಕಾರಿಗಳೂ ಭಾಗಿಯಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಅಬಕಾರಿ ಇಲಾಖೆಯಲ್ಲಷ್ಟೇ ಅಲ್ಲದೆ, ಇತರ ಅನೇಕ ಇಲಾಖೆಗಳಲ್ಲೂ ಭ್ರಷ್ಟಾಚಾರ ನಡೆದಿರುವ ಅನುಮಾನವಿದೆ ಎಂದು ಹೇಳಿದರು.
ಸಂಪುಟದಲ್ಲಿ ಇರುವ ಎಲ್ಲಾ ಸಚಿವರ ಪರಿಸ್ಥಿತಿಯೂ ಇದೇ ರೀತಿಯಾಗಿದೆ ಎಂದು ಸಚಿವ ತಿಮ್ಮಾಪೂರ ಅವರೇ ಹೇಳಿಕೊಂಡಿದ್ದಾರೆ ಎಂಬುದನ್ನು ಉಲ್ಲೇಖಿಸಿದ ನಾರಾಯಣಸ್ವಾಮಿ, ಇದೇ ವಿಚಾರಕ್ಕೆ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ..
ಮೇಲ್ಮನೆಯಲ್ಲಿಯೂ ಪ್ರಧಾನಿ ವಿರುದ್ಧ ನಿಂದನೆ ಮಾಡುತ್ತಾ ಸಮಯ ವ್ಯರ್ಥ ಮಾಡಲಾಗುತ್ತಿದೆ..ಪ್ರತಿಪಕ್ಷ ಸದಸ್ಯರಿಗೆ ಮಾತನಾಡಲು ಅವಕಾಶ ನೀಡದೇ ತಡೆಹಿಡಿಯಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನಮ್ಮ ಶಾಸಕರು ಪ್ರಶ್ನೆ ಕೇಳಿದ್ದಕ್ಕೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿರುವುದು ಉದ್ದಟತನದ ನಡವಳಿಕೆ ಎಂದು ಟೀಕಿಸಿದರು.
ಪ್ರಧಾನಿಯನ್ನು ತುಚ್ಛವಾಗಿ ನಿಂದಿಸುವುದು ಸರಿಯಲ್ಲ ಎಂದು ಈ ರೀತಿಯ ವರ್ತನೆ ಮುಂದುವರೆದರೆ ಅಬಕಾರಿ ಸಚಿವ ತಿಮ್ಮಾಪೂರ ಅವರ ರಾಜೀನಾಮೆಗೆ ಇನ್ನಷ್ಟು ತೀವ್ರವಾಗಿ ಆಗ್ರಹಿಸಲಾಗುವುದು ಎಂದು ಎಚ್ಚರಿಸಿದರು.
ಕೆಳಮನೆಯಲ್ಲಿನ ವಿಪಕ್ಷಗಳ ಬೇಡಿಕೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು. ಅಬಕಾರಿ ಸಚಿವ ತಿಮ್ಮಾಪೂರ ಅವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.