2026-07-23 09:18:28

this budget not good for state; bommai Speed News Kannada

 this budget not good for state; bommai  Speed News Kannada

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿರುವ ಬಜೆಟ್  ದಿಕ್ಕು ದೆಸೆ ಇಲ್ಲದ ಶೂನ್ಯ ಬಜೆಟ್ ಆಗಿದ್ದು, ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗಲಿದೆ. ಇದರಿಂದ ರಾಜ್ಯದ ಹಣಕಾಸಿನ ಸ್ಥಿತಿಯ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ ಕಳಪೆಯಾಗಿದೆ. ರೂ.1.32 ಲಕ್ಷ ಕೋಟಿ ಸಾಲ ಮಾಡಿ ಸುಮಾರು 25 ಸಾವಿರ ಕೋಟಿ ರೂ. ಹೊಸ ತೆರಿಗೆ ಹಾಕಿ 22 ಸಾವಿರ ಕೋಟಿ ರೂ. ಕೊರತೆ ಬಜೆಟ್ ಮಂಡನೆ ಮಾಡಿದ್ದಾರೆ. ರಾಜದ ಹಣಕಾಸಿನ ಮೇಲೆ ಬಹಳ ದೊಡ್ಡ ಪರಿಣಾಮ ಬೀರಲಿದೆ. ರಾಜ್ಯವನ್ನು ಹತ್ತರಿಂದ 15 ವರ್ಷ ಹಿಂದೆ ತೆಗೆದುಕೊಂಡು ಹೋಗುತ್ತದೆ. 17 ಬಾರಿ ಬಜೆಟ್ ಮಂಡನೆ ಮಾಡಿರುವ ಸಿಎಂರಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದರು.

ನೀರಾವರಿಗೆ ಕೇವಲ 22 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ 25 ಸಾವಿರ ಕೋಟಿ ರೂ. ಮೀಸಲಿಡಬೇಕಿತ್ತು. ಆದರೆ, ಯಾವುದೇ ಅನುದಾನ ಮೀಸಲಿಟ್ಟಿಲ್ಲ. ಆರೋಗ್ಯ, ಗ್ರಾಮೀಣಾಭಿವೃದ್ಧಿಗೆ ಅನುದಾನ ಕಡಿಮೆ ಇದೆ ಎಂದರು.

ಒಳ ಮೀಸಲಾತಿಗಾಗಿ ಹೋರಾಟ:

ಒಳ ಮೀಸಲಾತಿ ಗೊಂದಲ  ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಒಳ ಮೀಸಲಾತಿ ವಿಚಾರದಲ್ಲಿ ಸರ್ಕಾರದ ಸಚಿವರ ನಡುವೆ ಗೊಂದಲ ಇದೆ, ಹೀಗಾಗಿ ದಲಿತ ಸಮಾಜಕ್ಕೆ ಅನ್ಯಾಯ ನಡೆಯುತ್ತಿದೆ. ಒಳ ಮೀಸಲಾತಿ ಕಾನೂನಿಗೆ ಬೆಳಗಾವಿ ಅಧಿವೇಶನದಲ್ಲಿ ಒಪ್ಪಿಗೆ ಪಡೆದು ರಾಜ್ಯಪಾಲರ ಒಪ್ಪಿಗೆ ಪಡೆದಿದ್ದಾರೆ. ಮೀಸಲಾತಿ ಪ್ರಮಾಣವನ್ನು ಶೇ.17 ಕ್ಕೆ ಹೆಚ್ಚಿಸಿ  ಈಗ ಕೊಡುವುದಿಲ್ಲ ಅಂದರೆ ಹೇಗೆ ? ಈ ಬಗ್ಗೆ ಅಡ್ವೋಕೇಟ್ ಜನರಲ್ ಅವರೇ ಅಫಿಡವಿಟ್ ಸಲ್ಲಿಸಿದ್ದಾರೆ. ಕೋರ್ಟ್ ಯಾವುದೇ ನಿರ್ದೇಶನ ಕೊಟ್ಟಿಲ್ಲ, ಆ ಕುಂಟು ನೆಪದಲ್ಲಿ ದಲಿತ ಸಮಾಜಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಕೂಡಲೇ ಸರ್ಕಾರ ಒಳ ಮೀಸಲಾತಿ ಜಾರಿ ಮಾಡದಿದ್ದರೆ ಬಿಜೆಪಿ ಹೋರಾಟ ಮಾಡಲಿದೆ ಎಂದು ಹೇಳಿದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.