ಗುವಾಹಟಿ: ಕೆಲವೇ ತಿಂಗಳಲ್ಲಿ ಅಸ್ಸಾಂ ವಿಧಾನಸಭೆಗೆ ಚುನಾವನೆ ನಡೆಯಲಿದ್ದು, ಮೂವರು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುವ ಮೂಲಕ ಕೈ ಪಾಳಯಕ್ಕೆ ಹೊಡೆತ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ನಿಂದ ಬಿಜೆಪಿ ಸೇರುವ ಮುಖಂಡರ ಸಂಖ್ಯೆ ಹೆಚ್ಚುತ್ತಲೇ ಇದೆ.
ಶಾಸಕರಾದ ಕೆ.ಪುರಕಾಯಸ್ಥ, ಶಶಿಕಾಂತ ದಾಸ್ ಮತ್ತು ಬಸಂತ ದಾಸ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಸೈಕಿಯಾ ಮತ್ತು ಕೇಂದ್ರ ಸಚಿವ ಪಬಿತ್ರ ಮಾರ್ಗರೇಟ್ ಅವರು ಈ ಶಾಸಕರನ್ನು ಪಕ್ಷಕ್ಕೆ ಸ್ವಾಗತಿಸಿದರು.
ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಮುಖಂಡ ಭೂಪೇನ್ ಬೋರಾ ಸೇರಿದಂತೆ ಹಲವರು ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಈ ಮೂವರು ಶಾಸಕರು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆಪ್ತರು ಎನ್ನಲಾಗಿದೆ. ಈ ಹಿಂದೆ ಇವರು ಬಿಜೆಪಿ ನೀತಿಗಳಿಗೆ ಬೆಂಬಲ ಸೂಚಿಸಿದ್ದರು. 126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಗೆ ಏಪ್ರಿಲ್ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಈ ಮೂವರು ಶಾಸಕರು ವಿಧಾನಸಭೆಯಲ್ಲಿ ತಮ್ಮ ಸರ್ಕಾರವನ್ನು ಬೆಂಬಲಿಸುತ್ತಿದ್ದರು. ಇಂದು ಅವರು ಅಧಿಕೃತವಾಗಿ ಪಕ್ಷಕ್ಕೆ ಸೇರಿದ್ದಾರೆ. ಅವರನ್ನು ಬಿಜೆಪಿಗೆ ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡಲಾಗುತ್ತದೆಯೇ ಎಂಬ ಪ್ರಶ್ನೆಗೆ, ಈ ವಿಷಯವನ್ನು ಇನ್ನೂ ಚರ್ಚಿಸಲಾಗಿಲ್ಲ, ಆದರೆ ಪಕ್ಷದ ರಾಜ್ಯ ಚುನಾವಣಾ ಸಮಿತಿ ನೋಡಿಕೊಳ್ಳುತ್ತದೆ ಎಂದು ಉತ್ತರಿಸಿದರು.