ಬೆಂಗಳೂರಿನಿಂದ ಪ್ರವಾಸಕ್ಕೆಂದು ವಿಜಯಪುರಕ್ಕೆ ಬಂದಿದ್ದ ಒಂದೇ ಕುಟುಂಬದ ಮೂವರು ನಗರದ ಹೊರವಲಯದ ಭೂತನಾಳ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ. ಮೃತರನ್ನು ಆರ್.ಟಿ. ನಗರದ ನಿವಾಸಿಗಳಾದ ಬಾಲಕ ಮಹಮ್ಮದ್ ಹಯಾತ್, ಅಬ್ದುಲ್ ಖುದ್ದುಸ್ ಮತ್ತು ಹೈದರ್ ಪಾಶಾ ಎಂದು ಗುರುತಿಸಲಾಗಿದೆ. ಒಟ್ಟು 14 ಜನರ ತಂಡವು ಪ್ರವಾಸಕ್ಕೆಂದು ವಿಜಯಪುರಕ್ಕೆ ಬಂದಿದ್ದಾಗ, ಭೂತನಾಳ ಕೆರೆಯ ಸೌಂದರ್ಯ ವೀಕ್ಷಿಸಲು ತೆರಳಿದ ಈ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ.
ಕೆರೆಗೆ ಭೇಟಿ ನೀಡಿದ್ದ ವೇಳೆ ಬಾಲಕ ಮಹಮ್ಮದ್ ಹಯಾತ್ ನೀರಿಗಿಳಿದು ಆಟವಾಡುತ್ತಾ ಆಕಸ್ಮಿಕವಾಗಿ ಆಳಕ್ಕೆ ಜಾರಿ ಮುಳುಗತೊಡಗಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು ತಂಡದಲ್ಲಿದ್ದ ಇನ್ನಿಬ್ಬರು ನೀರಿಗೆ ಧುಮುಕಿದ್ದಾರೆ. ಆದರೆ, ನೀರಿನ ಆಳ ಮತ್ತು ಹೂಳಿನಿಂದಾಗಿ ಬಾಲಕನನ್ನು ರಕ್ಷಿಸಲು ಸಾಧ್ಯವಾಗದೆ ಅವರು ಕೂಡ ನೀರಿನಲ್ಲಿ ಸಿಲುಕಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಆದರ್ಶ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರ ಶವಗಳನ್ನು ಕೆರೆಯಿಂದ ಹೊರತೆಗೆದಿದ್ದಾರೆ.
ಮತ್ತೊಬ್ಬ ವ್ಯಕ್ತಿಯನ್ನು ಅಸ್ವಸ್ಥ ಸ್ಥಿತಿಯಲ್ಲಿ ರಕ್ಷಿಸಲಾಯಿತಾದರೂ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಸದ್ಯ ಮೃತದೇಹಗಳನ್ನು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.