ಬೆಂಗಳೂರು: ಗ್ರಾಮೀಣ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಹಾಗೂ ವಿಕೇಂದ್ರೀಕೃತ ಆಡಳಿತದ ತತ್ವಗಳನ್ನು ಉಳಿಸಿಕೊಳ್ಳಲು ಮಹಾತ್ಮಾ ಗಾಂಧಿ ನರೇಗಾ ಯೋಜನೆಯನ್ನು ಮರುಸ್ಥಾಪಿಸುವಂತೆ ಕಾನೂನು ಹೋರಾಟ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ಬಜೆಟ್ ಮಂಡಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಗಾ ಯೋಜನೆಯು, ಬೇಡಿಕೆ ಆಧಾರಿತ ಮತ್ತು ಹಕ್ಕು-ಆಧಾರಿತ ಸ್ವರೂಪದ ಕಾರ್ಯಕ್ರಮವಾಗಿತ್ತು. ಈ ಯೋಜನೆಯು ಸಣ್ಣ ಮತ್ತು ಅತಿ ಸಣ್ಣ ರೈತರು ಹಾಗೂ ಭೂರಹಿತ ಕಾರ್ಮಿಕರು ಸೇರಿದಂತೆ ಗ್ರಾಮೀಣ ಕುಟುಂಬಗಳು ಅಗತ್ಯವಿದ್ದಾಗ, ವಿಶೇಷವಾಗಿ ಕೃಷಿ ಚಟುವಟಿಕೆಗಳು ಕಡಿಮೆ ಇರುವ ಸಮಯದಲ್ಲಿ ಉದ್ಯೋಗ ಖಾತ್ರಿಯನ್ನು ಖಚಿತಪಡಿಸಿತ್ತು.
ಆದರೆ ಹೊಸ G-RAM-G ಯೋಜನೆಯು, ಶಾಸನಬದ್ಧ ಉದ್ಯೋಗ ಖಾತರಿಯನ್ನು ದುರ್ಬಲಗೊಳಿಸಿದೆ. ಇದರಿಂದಾಗಿ ಆದಾಯ ಭದ್ರತೆಯಿಲ್ಲದೆ ಜನರ ಜೀವನೋಪಾಯ ಕಷ್ಟವಾಗಲಿದೆ ಮತ್ತು ವಲಸೆ ಹೆಚ್ಚಾಗುವ ಅಪಾಯವಿದೆ. ಅಲ್ಲದೆ ಸರ್ಕಾರದ ಮೇಲೆ ಹೆಚ್ಚುವರಿಯಾಗಿ 2,000 ಕೋಟಿ ರೂ. ಗಳಷ್ಟು ಆರ್ಥಿಕ ಹೊರೆ ಬೀಳಲಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಗ್ರಾಮೀಣ ಜೀವನೋಪಾಯವನ್ನು ಬಲಪಡಿಸಲು ಹಿಂದಿನ MGNREGS ಯೋಜನೆಯನ್ನು ಪುನಃಸ್ಥಾಪಿಸುವಂತೆ ಕೇಂದ್ರ ಸರ್ಕಾರವನ್ನು ನಮ್ಮ ಸರ್ಕಾರವು ತೀವ್ರವಾಗಿ ಆಗ್ರಹಿಸುತ್ತಿದ್ದು, ಗ್ರಾಮೀಣ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಹಾಗೂ ವಿಕೇಂದ್ರೀಕೃತ ಆಡಳಿತದ ತತ್ವಗಳನ್ನು ಉಳಿಸಿಕೊಳ್ಳಲು ಅಗತ್ಯವಿದ್ದಲ್ಲಿ ಕಾನೂನು ಹೋರಾಟವನ್ನೂ ಸಹ ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದ ಈವರೆಗೆ ಕೇವಲ 11,786 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿದ್ದು, ಇನ್ನೂ 19,102 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕಾಗಿರುತ್ತದೆ. ರಾಜ್ಯ ಸರ್ಕಾರವು ಈ ಯೋಜನೆಗೆ 15,500 ಕೋಟಿ ರೂ.ಗಳಷ್ಟು ಅನುದಾನವನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಿದ್ದು, ಈವರೆಗೆ ಒಟ್ಟು 27,098 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. 2026-27ನೇ ಸಾಲಿನಲ್ಲಿ ಈ ಯೋಜನೆಗಾಗಿ 10,433 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿರುತ್ತದೆ. ಈ ಯೋಜನೆಯಡಿ ರಾಜ್ಯದ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸಲು ಕೇಂದ್ರ ಸರ್ಕಾರ ಬಾಕಿ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಗುವುದು ಎಂದೂ ತಿಳಿಸಿದರು.
C. ಸರ್ವೋಚ್ಚ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಪ್ರಮುಖ ಖನಿಜಗಳ ಮೇಲೆ ಸ್ವಾಮ್ಯ ಶುಲ್ಕದ ಜೊತೆಗೆ ಗಣಿಗಾರಿಕೆ ಮೇಲೆ ತೆರಿಗೆ ವಿಧಿಸಲು ಕಾಯಿದೆ. ರಚಿಸಿದ್ದು, ಪ್ರಸ್ತುತ ಕೇಂದ್ರ ಸರ್ಕಾರದ ಅನುಮೋದನೆ ದೊರಕದೆ ಕಳೆದ ಒಂದು ವರ್ಷದಿಂದ ವಿಳಂಬವಾಗಿರುತ್ತದೆ. ಕೇಂದ್ರ ಸರ್ಕಾರದ ಅನುಮೋದನೆ ದೊರಕುವ ನಿರೀಕ್ಷೆಯಲ್ಲಿ, 2026-27ನೇ ಸಾಲಿಗೆ ಖನಿಜ ಗಣಿಗಾರಿಕೆ ತೆರಿಗೆಯಿಂದ 3,000 ಕೋಟಿ ರೂ.ಗಳ ರಾಜಸ್ವವನ್ನು ಅಂದಾಜಿಸಲಾಗಿದೆ.
12) ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೂ ಸರ್ಕಾರ ವಿಶೇಷ ಪ್ರಾಮುಖ್ಯತೆ ನೀಡುತ್ತಿದೆ. ರಾಜ್ಯ ಸರ್ಕಾರವು 5ನೇ ಹಣಕಾಸು ಆಯೋಗದ ವರದಿಯನ್ನು ಪರಿಶೀಲಿಸಿ, ತನ್ನ ಸ್ವಂತ ಸಂಪನ್ಮೂಲಗಳಿಂದ ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡುವ ಅನುದಾನವನ್ನು ಶೇ.48ರಿಂದ ಶೇ.50ಕ್ಕೆ ಹೆಚ್ಚಿಸಲು ನಿರ್ಧರಿಸಿದೆ. ಇದರಲ್ಲಿ ಶೇ.35ರಷ್ಟು ಪಂಚಾಯತ್ ರಾಜ್ ಸಂಸ್ಥೆಗಳಿಗೆ ಹಾಗೂ ಶೇ.15ರಷ್ಟು ನಗರ ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡಲಾಗುವುದು.
ರಾಜ್ಯದ ಅಭಿವೃದ್ಧಿ ಮತ್ತು ಪ್ರಾದೇಶಿಕ ಅಸಮತೋಲನ ನಿವಾರಣೆಯ ಉದ್ದೇಶದಿಂದ ಪ್ರೊ ಎಂ. ಗೋವಿಂದರಾವ್ ಸಮಿತಿಯ ಶಿಫಾರಸ್ಸುಗಳನ್ನು 2025-27 ರಿಂದ ಹಂತ ಹಂತವಾಗಿ ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ. ಈ ಉದ್ದೇಶಕ್ಕಾಗಿ ಆಯವ್ಯಯದಲ್ಲಿ 4.291 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿರುತ್ತದೆ.