ಬೆಂಗಳೂರು: ನಾಳೆ ಶನಿವಾರ (ಮೇ.30) ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ(ಸಿಎಲ್ ಪಿ) ಸಭೆ ನಡೆಯಲಿದೆ. ಖಾಸಗಿ ಹೋಟೆಲ್ ನಲ್ಲಿ ನಡೆಯಲಿರುವ ಸಿಎಲ್ ಪಿ ಸಭೆಯಲ್ಲಿ ನೂತನ ನಾಯಕನ ಆಯ್ಕೆ ನಡೆಯಲಿದೆ. ನಿರೀಕ್ಷೆಯಂತೆ ಡಿಕೆ ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಲಿದ್ದಾರೆ.
ಅತ್ತ ದೆಹಲಿಯಲ್ಲೂ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ನಿನೆ ರಾತ್ರಿ ದೆಹಲಿ ತಲುಪಿದ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೆ.ಜೆ. ಜಾರ್ಜ್, ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹಾಜರಿದ್ದರು.
ರಾಜ್ಯಸಭಾ ಸ್ಥಾನವನ್ನು ನಿರಾಕರಿಸಿರುವ ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣದಲ್ಲೇ ಉಳಿಯಲು ನಿರ್ಧರಿಸಿದ್ದಾರೆ. ಈ ನಿಟ್ಟಿನಲ್ಲಿ ಅವರು ತಮ್ಮ ಭವಿಷ್ಯ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಡಿಕೆ ಶಿವಕುಮಾರ್ ಅವರೂ ಸಹ ವರಿಷ್ಠರನ್ನು ಭೇಟಿ ಮಾಡುತ್ತಿದ್ದಾರೆ. ಎಲ್ಲರನ್ನೂ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕ ಆಹ್ವಾನಿಸುತ್ತಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋಥ್ ಅವರು ಇಂದು ಮುಂಜಾನೆ ಅಂಗೀಕರಿಸಿದ್ದು ಸಚಿವ ಸಂಪುಟವನ್ನು ಕೂಡಲೇ ಜಾರಿಗೆ ಬರುವಂತೆ ವಿಸರ್ಜಸಿದ್ದಾರೆ.
ರಾಜ್ಯಪಾಲರು ಸಂವಿಧಾನದ 164(1) ನೇ ವಿಧಿಯ ಅಡಿ ರಾಜೀನಾಮೆ ಅಂಗೀಕರಿಸಿದ್ದಾರೆ. ನಿನ್ನೆ ಗುರುವಾರ ಮಧ್ಯಾಹ್ನ ಸಿದ್ದರಾಮಯ್ಯ ಅವರು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ್ದರು.