ನವದೆಹಲಿ: ಬಜೆಟ್ ಮೇಲಿನ ಚರ್ಚೆಗೂ ಮುನ್ನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಮಾತನಾಡಲು ಅವಕಾಶ ನೀಡಬೇಕು ಎಂದು ಪ್ರತಿಪಕ್ಷಗಳು ತಮ್ಮ ಪಟ್ಟು ಸಡಿಲಿಸಿಲ್ಲ. ಹಾಗೆಯೇ ಸರ್ಕಾರವೂ ವಿಪಕ್ಷಗಳ ಬೇಡಿಕೆಗೆ ಮಣಿಯಲಿಲ್ಲ. ಇದರಿಂದ ಆರನೇ ದಿನವಾದ ಸೋಮವಾರವೂ ಯಾವುದೇ ಕಲಾಪ ನಡೆಯಲಿಲ್ಲ.
ಇನ್ನು ರಾಜ್ಯಸಭೆಯಲ್ಲೂ ಪರಿಸ್ಥಿತಿ ಭೀನ್ನವಾಗಿರಲಿಲ್ಲ. ಇದೇ ವಿಚಾರ ಪ್ರಸ್ತಾಪಿಸಿದ ವಿರೋಧ ಪಕ್ಷಗಳ ಸದಸ್ಯರು ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿದರು ಆದರೆ ಸಭಾಪತಿ ಅವಕಾಶ ನೀಡದ ಕಾರಣ ಸಭಾತ್ಯಾಗ ಮಾಡಿದರು.
ಸದನದಲ್ಲಿ ಮಾತನಾಡಲು ರಾಹುಲ್ ಗಾಂಧಿ ಅವರಿಗೆ ಅವಕಾಶ ನಿರಾಕರಿಸಿದ ಬೆನ್ನಲ್ಲೇ ಪ್ರತಿಪಕ್ಷಗಳು ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸಬೇಕು ಎಂದು ಕೋರಿ ನಿರ್ಣಯ ಮಂಡಿಸಲು ಸಿದ್ದತೆ ನಡೆಸಿದ್ದಾರೆ.
ಸೇನೆಯ ಮಾಜಿ ಮುಖ್ಯಸ್ಥ ಜನರಲ್ ನರವಣೆ ಅವರ ಅಪ್ರಕಟಿತ ಪುಸ್ತದಲ್ಲಿ ಪ್ರಸ್ತಾಪಿಸಲಾಗಿರುವ ವಿಷಯಗಳನ್ನು ಪ್ರಸ್ತಾಪಿಸಲು ತಮಗೆ ಅವಕಾಶ ನೀಡಲು ಒಪ್ಪಂದ ಆಗಿದೆ ಎಂದು ಲೋಕಸಭೆಯಲ್ಲಿ ರಾಹುಲ್ ಗಾಂಧಿ ಪ್ರತಿಪಾದಿಸಿದ್ದರು. ಆದರೆ ಇಂತಹ ಯಾವುದೇ ಒಪ್ಪಂದ ಆಗಿಲ್ಲ ಎಂದು ಆಡಳಿತಾರೂಢ ಬಿಜೆಪಿ ತಿಳಿಸಿದೆ. ಇಂದು ಸದನ ಸರಾಗವಾಗಿ ನಡೆಯಲಿದೆಯೇ ಎಂದು ಕಾದು ನೋಡಬೇಕಿದೆ.