ಬೆಂಗಳೂರು: ಅಪ್ರಾಪ್ತರಿಗೆ ವಾಹನ ನೀಡುವ ಪೋಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಇಂದು ಪ್ರತಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಹೊಸಕೋಟೆ ಹಾಗೂ ನೆಲಮಂಗಲದ ಬಳಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳ ವಿವರ ನೀಡಿದ ಅವರು ಈ ಎರಡೂ ಅಪಘಾತಗಳಲ್ಲಿ ಮೃತಪಟ್ಟವರಲ್ಲಿ ಬಹುತೇಕರು ಅಪ್ರಾಪ್ತರು. ಪೋಷಕರು ತಮ ಮಕ್ಕಳು ಎಲ್ಲಿಗೆ ಹೋಗುತ್ತಾರೆ ಎಂಬುದರ ಬಗ್ಗೆ ನಿಗಾ ವಹಿಸಬೇಕು ಎಂದು ಹೇಳಿದರು.
ಅಪ್ರಾಪ್ತರು ವಾಹನ ಚಾಲನೆ ಮಾಡುವುದು ನಿಯಮ ಉಲ್ಲಂಘನೆಯಾಗುತ್ತದೆ. ಈ ಬಗ್ಗೆ ಪೊಲೀಸರು ಆಗಾಗ್ಗೆ ಜಾಗೃತಿ ಮೂಡಿಸುತ್ತಿದ್ದರೂ ಅಪ್ರಾಪ್ತರು ವಾಹನಗಳನ್ನು ಚಲಾಯಿಸುತ್ತಿರುವುದು ಕಂಡು ಬರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಯಾರೇ ಅಪ್ರಾಪ್ತರು ಸಿಕ್ಕಿಬಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.
ಅಪ್ರಾಪ್ತರ ವಿರುದ್ಧ 2023ರಲ್ಲಿ 95 ಪ್ರಕರಣ, 2024 ರಲ್ಲಿ 197 ಹಾಗೂ 2025 ರಲ್ಲಿ 414 ಪ್ರಕರಣಗಳು ದಾಖಲಾಗಿವೆ ಎಂದ ಅವರು ಅಪ್ರಾಪ್ತರು ವೀಲ್ಹಿಂಗ್ ಮಾಡುತ್ತಿರುವುದು ಹೆಚ್ಚುತ್ತಿದ್ದು, ಅವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಅಪ್ರಾಪ್ತರು ವಾಹನಗಳನ್ನು ಚಲಾಯಿಸುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಒಂದುವೇಳೆ ಅಪ್ರಾಪ್ತರು ವಾಹನ ಚಾಲನೆ ಮಾಡುತ್ತಿರುವುದು ಕಂಡು ಬಂದಲ್ಲಿ ಅಂತಹ ವಾಹನಗಳನ್ನು ಜಪ್ತಿ ಮಾಡಿ ವಾಹನದ ಮಾಲೀಕರು ಹಾಗೂ ಪೋಷಕರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.