2026-07-08 11:28:57

WAYANAD LANDSLIDE | ವಯನಾಡು ಭೂಕುಸಿತ ದುರಂತ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಸಿಎಂ ವಿಡಿ ಸತೀಶನ್ | SNK

WAYANAD LANDSLIDE | ವಯನಾಡು ಭೂಕುಸಿತ ದುರಂತ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಸಿಎಂ ವಿಡಿ ಸತೀಶನ್ | SNK

ತಿರುವನಂತಪುರ: ‌ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತಕ್ಕೆ ಐದು ಜನರು ಬಲಿಯಾಗಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇತ್ತೀಚೆಗೆ ಸುರಿದ ಭಾರಿ ಮಳೆಯ ಬೆನ್ನಲ್ಲೇ ಈ ದುರಂತ ಸಂಭವಿಸಿದೆ.  ಈ ಘಟನೆಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸಿಎಂ ವಿಡಿ ಸತೀಶನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಇದೊಂದು ದುರದೃಷ್ಟಕರ ಘಟನೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ರಸ್ತೆ ಕಾಮಗಾರಿ ನಡೆಯುತ್ತಿದ್ದ ಘಟನಾ ಸ್ಥಳದ ಬಳಿ ಭಾರಿ ಪ್ರಮಾಣದಲ್ಲಿ ಮಣ್ಣನ್ನು ಗುಡ್ಡೆ ಹಾಕಲಾಗಿತ್ತು. ಇದನ್ನು ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಲೋಕೋಪಯೋಗಿ ಸಚಿವ ಪಿ.ಕೆ ಬಶೀರ್ ಅವರು ಗುತ್ತಿಗೆದಾರರಿಗೆ ಈ ಮೊದಲೇ ಸೂಚನೆ ನೀಡಿದ್ದರು. ಗುತ್ತಿಗೆದಾರರು ಸೂಚನೆಗಳನ್ನು ಪಾಲಿಸದೇ ನಿರ್ಲಕ್ಷ್ಯ ತೋರಿದ್ದರಿಂದಲೇ ಈ ದುರಂತ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಸುರಂಗ ಮಾರ್ಗ ಯೋಜನೆ ಕಾಮಗಾರಿಯ ವೇಳೆ ಅಪಾರ ಪ್ರಮಾಣದ ಮಣ್ಣನ್ನು ಹೊರತೆಗೆದು ಆ ಮಣ್ಣನ್ನು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ, ಅವೈಜ್ಞಾನಿಕವಾಗಿ ರಸ್ತೆ ಮತ್ತು ಸೇತುವೆಯ ಪಕ್ಕದಲ್ಲೇ ರಾಶಿ ಹಾಕಲಾಗಿತ್ತು. ಹೀಗೆ ಜಮಾಯಿಸಲಾಗಿದ್ದ ಮಣ್ಣಿನ ಬೃಹತ್ ದಿಬ್ಬವು ಮಳೆಗೆ ಕೊಚ್ಚಿಬಂದು ಈ ದುರಂತ ಸಂಭವಿಸಿದೆ. ಸ್ಥಳೀಯ ಆಡಳಿತ ಮತ್ತು ಸಾರ್ವಜನಿಕರು ಈ ಮಣ್ಣನ್ನು ತಕ್ಷಣವೇ ತೆರವುಗೊಳಿಸುವಂತೆ ಗುತ್ತಿಗೆ ಕಂಪನಿಗೆ ಮುಂಚಿತವಾಗಿಯೇ ಸೂಚನೆ ನೀಡಿದ್ದರೂ, ಕಂಪನಿಯು ಇದನ್ನು ನಿರ್ಲಕ್ಷಿಸಿತ್ತು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಆದರೆ, ಈ ಆರೋಪಗಳನ್ನು ಮೂಲಸೌಕರ್ಯ ಕಂಪನಿಯಾದ ದಿಲೀಪ್ ಬಿಲ್ಡ್‌ಕಾನ್ ತಳ್ಳಿಹಾಕಿದೆ. ತಾವು ಎಲ್ಲಾ ಎಂಜಿನಿಯರಿಂಗ್, ಸುರಕ್ಷತೆ ಮತ್ತು ಪರಿಸರ ನಿಯಮಗಳನ್ನು ಪಾಲಿಸಿಯೇ ಕೆಲಸ ಮಾಡುತ್ತಿರುವುದಾಗಿ ಕಂಪನಿ ಹೇಳಿಕೊಂಡಿದೆ. ಪ್ರಸ್ತುತ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (NDRF) ಎರಡು ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಮಣ್ಣಿನ ಅಡಿಯಲ್ಲಿ ಯಾರಾದರೂ ಸಿಲುಕಿದ್ದಾರೆಯೇ ಎಂದು ಪತ್ತೆ ಹಚ್ಚಲು ತೀವ್ರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಪ್ರದೇಶದಲ್ಲಿ ಕೇವಲ 24 ಗಂಟೆಗಳಲ್ಲಿ 256 ಮಿಲಿಮೀಟರ್‌ನಷ್ಟು ದಾಖಲೆ ಮಳೆಯಾಗಿದ್ದು, ರಕ್ಷಣಾ ಕಾರ್ಯಕ್ಕೆ ಸವಾಲಾಗಿ ಪರಿಣಮಿಸಿದೆ. ದುರಂತದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸರ್ಕಾರ ಕ್ರಮ ಕೈಗೊಂಡಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.