ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ರೂ.3 ಸಾವಿರ ಸಹಾಯಧನ ನೀಡುವ ‘ಅನ್ನಪೂರ್ಣ ಯೋಜನೆ’ ಮತ್ತು ಸರ್ಕಾರಿ ಬಸ್ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಗಳಿಗೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅಸ್ತು ಎಂದಿದ್ದಾರೆ.
ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಬಿಜೆಪಿ ಈ ಯೋಜನೆಗಳನ್ನು ಜಾರಿಗೊಳಿಸುವವ ಭರವಸೆ ನೀಡಿತ್ತು. ಈ ಹಿಂದಿನ ಮಮತಾ ಬ್ಯಾನರ್ಜಿ ಸರ್ಕಾರವ ‘ಲಕ್ಷ್ಮಿರ್ ಭಂಡಾರ್’ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು ರೂ.1,500 ನೀಡುತ್ತಿತ್ತು.
ರಾಜ್ಯ ಕಾರ್ಯದರ್ಶಿ ನಬನ್ನಾ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅಗ್ನಿಮಿತ್ರ ಪೌಲ್, ಈ ಎರಡೂ ಯೋಜನೆಗಳಿಗೆ ಪಶ್ಚಿಮ ಬಂಗಾಳ ಸಚಿವ ಸಂಪುಟವು ಅನುಮತಿ ನೀಡಿದ್ದು, ಜೂನ್ 1ರಿಂದ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ಸಿಎಎ ಅಡಿಯಲ್ಲಿ ಪೌರತ್ವಕ್ಕೆ ಅರ್ಜಿ ಸಲ್ಲಿಸಿರುವ ಮತ್ತು ಎಸ್ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯ ಸೇರ್ಪಡೆಗಾಗಿ ನ್ಯಾಯಾಲಯದ ಮೆಟ್ಟಿಲೇರಿರುವ ಮಹಿಳೆಯರು ಕೂಡ ‘ಅನ್ನಪೂರ್ಣ’ ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದು ಎಂದು ಅವರು ಹೇಳಿದ್ದಾರೆ.