ನವದೆಹಲಿ: ಟಿ20 ವಿಶ್ವಕಪ್ ಆರಂಭಕ್ಕೆ ಮುಂಚಿತವಾಗಿ ಪಾಕಿಸ್ತಾನ ಹೊಸ ನಾಟಕ ಆರಂಭಿಸಿದೆ. ಪಾಕಿಸ್ತಾನ ಈ ಬಾರಿಯ ವಿಶ್ವಕಪ್ನಲ್ಲಿ ಭಾಗವಹಿಸುವುದಾಗಿ ಸ್ಪಷ್ಟಪಡಿಸಿದೆ. ಆದರೆ ಫೆಬ್ರವರಿ 15 ರಂದು ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ತಿಳಿಸಿದೆ. ಈ ಹಿನ್ನೆಲೆ ಚರ್ಚೆಗಳು ಜೋರಾಗಿವೆ. ಇದೇ ಮೊದಲ ಬಾರಿಗೆ ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಆಘಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಯನ್ನು 3-0 ಅಂತರದಿಂದ ಗೆದ್ದ ಪಾಕಿಸ್ತಾನ, ಟಿ20 ವಿಶ್ವಕಪ್ಗೆ ಭರ್ಜರಿ ತಯಾರಾಗಿದೆ ಎಂದು ಆಟದ ಮೂಲಕ ತಿಳಿಸಿದೆ. ಈ ಪಂದ್ಯದ ಬಳಿಕ ಸಲ್ಮಾನ್ ಅಲಿ ಆಘಾ ದೊಡ್ಡ ಹೇಳಿಕೆ ನೀಡಿದ್ದಾರೆ. ಭಾರತದ ವಿರುದ್ಧ ಆಡದಿರುವ ನಿರ್ಧಾರವು ತಂಡದದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ನಮ್ಮ ತಂಡ ವಿಶ್ವಕಪ್ನಲ್ಲಿ ಭಾಗವಹಿಸಲಿದೆ. ಆದರೆ ಭಾರತದ ವಿರುದ್ಧ ಆಡದಿರುವ ನಿರ್ಧಾರ ನಮ್ಮದಲ್ಲ. ಈ ವಿಷಯದ ಬಗ್ಗೆ ಸರ್ಕಾರ ಮತ್ತು ಪಿಸಿಬಿ ಏನು ಹೇಳಿದರೂ ನಾವು ಒಪ್ಪಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಪಾಕಿಸ್ತಾನದ ಸರ್ಕಾರ ಈ ಬಗ್ಗೆ ಈಗಾಗಲೇ ಸಾಮಾಜಿಕ ತಾಣದಲ್ಲಿ ಬಹಿರಂಗ ಪಡಿಸಿದೆ. ಟಿ20 ವಿಶ್ವಕಪ್ನಲ್ಲಿ ಆಡಲು ತಂಡಕ್ಕೆ ಅನುಮತಿ ನೀಡಲಾಗಿದೆ. ಆದರೆ ಫೆಬ್ರವರಿ 15 ರಂದು ಕೊಲಂಬೊದಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಆಡುವುದಿಲ್ಲ ಎಂದು ತಿಳಿಸಿದೆ. ಭಾರತ ಹಾಗೂ ಪಾಕಿಸ್ತಾನ ನಡುವಣ ಹೈ ವೋಲ್ವೇಜ್ ಫೈಟ್ ಶ್ರೀಲಂಕಾದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಫೆಬ್ರವರಿ 15 ರಂದು ನಡೆಯಲಿದೆ.