ಸಮಾವೇಶ ಮಾಡಲು ನಿಮ್ಮ ಸಾಧನೆ ಏನು? ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಅಶೋಕ ಪ್ರಶ್ನೆ|Speed News Kannada
55
2026-05-16 17:15:05
ಸಮಾವೇಶ ಮಾಡಲು ನಿಮ್ಮ ಸಾಧನೆ ಏನು? ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಅಶೋಕ ಪ್ರಶ್ನೆ|Speed News Kannada
ಬೆಂಗಳೂರು: ಅನಾಥರು, ವೃದ್ಧರು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಶೋಷಿತ, ಅಸಹಾಯಕ ಜನವರ್ಗಗಳಿಗೆ ನೀಡುವ ಸಹಾಯಧನ ಹಾಗೂ ಪಿಂಚಣಿ ಸ್ಥಗಿತಗೊಂಡಿದೆ. ಈ ರೀತಿ ಖಜಾನೆ ಖಾಲಿಯಾಗಿದ್ದರೂ ಸಾಧನಾ ಸಮಾವೇಶ ಮಾಡಲು ಕಾಂಗ್ರೆಸ್ ನಾಯಕರಿಗೆ ಯಾವ ಯೋಗ್ಯತೆ ಇದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದ್ದಾರೆ.
ಇಂದು ಸುದ್ದಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ತಾನು ಮಾಡಿದ ಪಾಪಗಳಿಗಾಗಿ ಸಮಾವೇಶ ನಡೆಸಿ ಸಂಭ್ರಮಾಚರಣೆ ಮಾಡುತ್ತಿದೆ. ಅರ್ಹರಿಗೆ ಸಹಾಯಧನ ಸ್ಥಗಿತಗೊಂಡಿದೆ. ಗೃಹಲಕ್ಷ್ಮಿಯ 5,000 ಕೋಟಿ ರೂ. ಅನ್ನಭಾಗ್ಯದ 700 ಕೋಟಿ ರೂ. ಇನ್ನೂ ಫಲಾನುಭವಿಗಳಿಗೆ ಸಿಕ್ಕಿಲ್ಲ. ಅನಾಥ ಮಕ್ಕಳ 73 ಕೋಟಿ ರೂ. ಅನುದಾನ ಬಿಡುಗಡೆಯಾಗಿಲ್ಲ. ಪರಿಶಿಷ್ಟ ಜಾತಿಗಳ 45,000 ಕೋಟಿ ರೂ. ಲೂಟಿಯಾಗಿದೆ. ಸಮೀಕ್ಷೆಯ ಹೆಸರಲ್ಲಿ ಇನ್ನೂ ರೈತರಿಗೆ ಪರಿಹಾರ ಕೊಟ್ಟಿಲ್ಲ. ಕಂದಾಯ ಇಲಾಖೆಯಡಿಯ 12 ಬಗೆಯ ಪಿಂಚಣಿಗಳನ್ನು ಮೂರು ತಿಂಗಳಿಂದ ಕೊಟ್ಟಿಲ್ಲ. ಈ ಪಿಂಚಣಿ ಯೋಜನೆಯಗಳಡಿ 81.88 ಲಕ್ಷ ಫಲಾನುಭವಿಗಳಿದ್ದು, ತಿಂಗಳಿಗೆ 894 ಕೋಟಿ ರೂ. ನೀಡಬೇಕಿದೆ. ಪ್ರತಿ ವರ್ಷ ಬಜೆಟ್ನಲ್ಲಿ 10,736 ಕೋಟಿ ರೂ. ಮೀಸಲಿಟ್ಟರೂ ಈ ಹಣ ಫಲಾನುಭವಿಗಳಿಗೆ ತಲುಪಿಲ್ಲ ಎಂದು ಹರಿಹಾಯ್ದರು.
ವೃದ್ಧಾಪ್ಯ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ, ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡುವ ಸಹಾಯಧನ ನೀಡಿಲ್ಲ. ನಾನು ಸಚಿವನಾಗಿದ್ದಾಗ, ಆಸಿಡ್ ದಾಳಿಗೊಳಗಾದ ಹೆಣ್ಣುಮಕ್ಕಳ ನೆರವಿಗೆ ತಿಂಗಳಿಗೆ 10,000 ರೂ. ನೀಡಲು ಕ್ರಮ ವಹಿಸಿದ್ದೆ. ಅದನ್ನೂ ಈ ಸರ್ಕಾರ ನಿಯಮಿತವಾಗಿ ನೀಡುತ್ತಿಲ್ಲ. ದೇವದಾಸಿಯರಿಗೆ 2,000 ರೂ., ಸ್ವಾತಂತ್ರ್ಯ ಹೋರಾಟಗಾರರಿಗೆ 10,000 ರೂ. ಹೀಗೆ ಯಾವುದನ್ನೂ ನೀಡುತ್ತಿಲ್ಲ. ಆಶಾ ಕಾರ್ಯಕರ್ತೆಯರಿಗೆ 10,000 ರೂ. ಗೌರವಧನ ನೀಡುವುದಾಗಿ ಭರವಸೆ ನೀಡಿದ್ದ ಸಿದ್ದರಾಮಯ್ಯ ಮಾತಿಗೆ ತಪ್ಪಿದ್ದಾರೆ. ನುಡಿದಂತೆ ನಡೆಯುತ್ತೇನೆ ಎಂದು ಹೇಳಿ ಕೊಟ್ಟ ಭರವಸೆ ಮರೆತಿದ್ದಾರೆ. ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸದೆ ಪದೇ ಪದೆ ಮುಷ್ಕರ ಮಾಡುವ ಸನ್ನಿವೇಶ ನಿರ್ಮಿಸಿದ್ದಾರೆ ಎಂದು ದೂರಿದರು.
ಆಯಾ ಜಿಲ್ಲೆಗಳಲ್ಲಿ ಜನಸ್ಪಂದನ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರೆ, ಜಿಲ್ಲಾ ಉಸ್ತುವಾರಿ ಸಚಿವರು ಕಮಿಶನ್ಗೆ ಸ್ಪಂದಿಸುತ್ತಿದ್ದಾರೆ. ಪ್ರತಿ 15 ದಿನಕ್ಕೆ ಒಮ್ಮೆ ಬೆಂಗಳೂರು ಸಿಟಿ ಪ್ರದಕ್ಷಿಣೆ ಮಾಡುತ್ತೇನೆಂದ ಸಿದ್ದರಾಮಯ್ಯ ಕೂಡ ಕಮಿಶನ್ ಹಿಂದೆ ಬಿದ್ದಿದ್ದಾರೆ. ನಗರದಲ್ಲಿ ಇ ಖಾತಾ ಅಭಿಯಾನ, ಬಿ ಖಾತಾದಿಂದ ಎ ಖಾತಾ ವರ್ಗಾವಣೆ ಮಾಡುತ್ತೇನೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿರುವುದು ಊರು ಕೊಳ್ಳೆ ಹೊಡೆದ ನಂತರ ಕೋಟೆ ಬಾಗಿಲು ಮುಚ್ಚಿದಂತಾಗಿದೆ. ಇದರಡಿಯಲ್ಲಿ ಅಧಿಕಾರಿ, ಸಿಬ್ಬಂದಿ ಜನರಿಂದ ಹಣ ಲೂಟಿ ಮಾಡುತ್ತಿದ್ದಾರೆ. ಫೋನ್ ಪೇ ಮೂಲಕ ಲಂಚ ತೆಗೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ದಾಖಲೆ ಸಮೇತ ಅಧಿವೇಶನದಲ್ಲಿ ಹೇಳಿದ್ದರೂ ಅದರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.. ಎಸ್ಐಆರ್ಗೆ ಏಕೆ ವಿರೋಧ?
ರಾಜ್ಯದಲ್ಲಿ 10 ಲಕ್ಷಕ್ಕೂ ಅಧಿಕ ಬಾಂಗ್ಲಾ ಪ್ರಜೆಗಳಿದ್ದಾರೆ. ಇತ್ತೀಚೆಗೆ ಪೊಲೀಸ್ ಆಯುಕ್ತರು 65 ಲಕ್ಷ ರೂ. ಖರ್ಚು ಮಾಡಿ 250 ಬಾಂಗ್ಲಾ ದೇಶದವರನ್ನು ವಿಮಾನದಲ್ಲಿ ಕಳುಹಿಸಿ ಗಡಿವರೆಗೆ ಬಿಟ್ಟು ಬಂದಿದ್ದಾರೆ. ಮಹದೇವಪುರ, ಚಿಕ್ಕಮಗಳೂರು, ಕೊಡಗು ಕಾಫಿ ಎಸ್ಟೇಟ್ಗಳಲ್ಲಿ ಸಾವಿರಾರು ಬಾಂಗ್ಲಾ ದೇಶೀಯರಿದ್ದಾರೆ. ಇದಕ್ಕೆ ಎಸ್ಐಆರ್ ಅಂತ್ಯ ಹಾಡಲಿದೆ. ಗುರುತಿನ ಚೀಟಿ ಇರುವವರು ಭಯ ಪಡಬೇಕಿಲ್ಲ. ಪ್ರತಿ ಬೂತ್ನಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಏಜೆಂಟ್ ಇರುವಾಗ ಅರ್ಹ, ನಿಜವಾದ ಮತದಾರರ ಹೆಸರು ರದ್ದಾಗಲು ಸಾಧ್ಯವೇ ಇಲ್ಲ ಎಂದರು.
ಮೋದಿ ರಕ್ಷಾಕವಚ ಆಗಿದ್ದಾರೆ:
ಕಳೆದ 49 ತಿಂಗಳಿಂದ ಪ್ರಧಾನಿ ಮೋದಿ ತೈಲ ದರ ಏರಿಸಿಲ್ಲ. ಯುದ್ಧದ ವಾತಾವರಣ ಇರುವುದರಿಂದ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಕಾಂಗ್ರೆಸ್ನ ಪ್ರಕಾರ, ಇಡೀ ಜಗತ್ತಿನಲ್ಲಿ ಭಾರತದಲ್ಲಿ ಮಾತ್ರ ತೈಲ ದರ ಏರಿಕೆಯಾಗಿದೆ. ಮಲೇಷಿಯಾದಲ್ಲಿ 71%, ಪಾಕಿಸ್ತಾನದಲ್ಲಿ 44%, ಯುಎಇನಲ್ಲಿ 86%, ಯುಎಸ್ನಲ್ಲಿ 48%, ಶ್ರೀಲಂಕಾದಲ್ಲಿ 41% ನೇಪಾಳದಲ್ಲಿ 51% ಏರಿಕೆಯಾಗಿದೆ. ಆದರೆ ಭಾರತದಲ್ಲಿ ಅತಿ ಕಡಿಮೆ ಎಂದರೆ 3% ಏರಿಕೆಯಾಗಿದೆ. ಇಷ್ಟಿದ್ದರೂ ಪ್ರಧಾನಿ ಮೋದಿ ಸಮರ್ಥರಿಲ್ಲ, 56 ಇಂಚಿನ ಎದೆ ಎಂದು ಟೀಕಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯನವರಿಗೆ ಎದೆ ಹೊಟ್ಟೆ ಸೇರಿ 96 ಇಂಚು ಆಗಬಹುದು. ಕಾಂಗ್ರೆಸ್ ಸರ್ಕಾರ 2024 ರಲ್ಲಿ ಪೆಟ್ರೋಲ್ಗೆ 3 ರೂ. ಹಾಗೂ 2025 ರಲ್ಲಿ 2 ರೂ. ಏರಿಸಿತ್ತು. ನಂದಿನಿ ಹಾಲಿಗೆ 9 ರೂ, ಆಲ್ಕೋಹಾಲ್ಗೆ 250%, ವಿದ್ಯುತ್ಗೆ 56 ಪೈಸೆ, ನೀರಿಗೆ 3%, ಬಸ್ ದರ 15% ಹಾಗೂ ಮಾರ್ಗಸೂಚಿ ದರವನ್ನು ಲೆಕ್ಕವಿಲ್ಲದಂತೆ ಏರಿಸಲಾಗಿದೆ. ದೇಶ ಸಂಕಷ್ಟದಲ್ಲಿದ್ದಾಗ ಚಿನ್ನದ ಬಳೆ ನೀಡಿ ಎಂದು ಜವಹರಲಾಲ್ ನೆಹರೂ ಕೇಳಿದ್ದರು. ಆದರೆ ಪ್ರಧಾನಿ ಮೋದಿ ಎಂದೂ ಆ ರೀತಿ ಕೇಳದೆ ಮಿತವ್ಯಯ ಮಾಡಿ ಎಂದು ಮನವಿ ಮಾಡಿದ್ದಾರೆ ಎಂದರು.
ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.