ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಸಮೀಪಿಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವಿನ ಪೈಪೋಟಿ ತೀವ್ರಗೊಳ್ಳುತ್ತಿದೆ.
ಹಾಲು ಮಹಾಮಂಡಳದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದವರೇ ಆದ ಮೂವರ ನಡುವೆ ಪೈಪೋಟಿ ಏರ್ಪಟ್ಟಿದೆ. ಬೆಂಗಳೂರು ಹಾಲು ಒಕ್ಕೂಟದ (ಬಮೂಲ್) ಅಧ್ಯಕ್ಷ ಡಿ.ಕೆ.ಸುರೇಶ್, ಬಳ್ಳಾರಿ, ಕೊಪ್ಪಳ- ರಾಯಚೂರು ಒಕ್ಕೂಟದ ಅಧ್ಯಕ್ಷ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ, ಕೋಲಾರ ಹಾಲು ಒಕ್ಕೂಟದ ಅಧ್ಯಕ್ಷ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಅವರು ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.
ಸಿದ್ದರಾಮಯ್ಯ ಅವರು ತಮ್ಮ ಆಪ್ತ ಶಾಸಕ ರಾಘವೇಂದ್ರ ಹಿಟ್ನಾಳ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಡಿಸಿಎಂ ಶಿವಕುಮಾರ್ ಅವರು ಲೋಕಸಭಾ ಚುನಾವಣೆಯಲ್ಲಿ ಪರಾಭವ ಹೊಂದಿರುವ ಸಹೋದರ ಡಿ.ಕೆ.ಸುರೇಶ್ ಅವರನ್ನು ಮುನ್ನೆಲೆಗೆ ತರಲು ಹರಸಾಹಸ ಪಡುತ್ತಿದ್ದಾರೆ. ಹಿಂದಿನ ಅವಧಿಯಲ್ಲಿ ಅವಕಾಶ ತಪ್ಪಿಸಿಕೊಂಡಿದ್ದ ಕೋಲಾರ ಜಿಲ್ಲೆ ಮಾಲೂರು ಶಾಸಕ ಕೆ.ವೈ. ನಂಜೇಗೌಡ ಅವರು ತಮಗೆ ಅವಕಾಶ ನೀಡುವಂತೆ ಒತ್ತ ಹೇರುತ್ತಿದ್ದಾರೆ.
ಅಂತಿಮವಾಗಿ ಕೆಎಂಎಫ್ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುವವರು ಯಾರು ಎಂಬ ಪ್ರಶ್ನೆಗೆ ಉತ್ತರ ನಿಗೂಢವಾಗಿದೆ. ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಈ ಇಬ್ಬರೊಳಗೆ ಯಾರು ಮೇಲುಗೈ ಸಾಧಿಸಲಿದ್ದಾರೆ ಎನ್ನುವುದು ಮತ್ತಷ್ಟು ಕುತೂಹಲ ಮೂಡಿಸಿದೆ.