ವಿಜಯನಗರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರೊಬೇಷನರಿ ಪಿಎಸ್ಐ ದೊರೆನಾಯ್ಕ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪತ್ನಿಯ ಆತ್ಮಹತ್ಯೆ ಯತ್ನ ಹಾಗೂ ಕೌಟುಂಬಿಕ ದೌರ್ಜನ್ಯದ ಆರೋಪದಡಿ ಈ ಕ್ರಮ ಕೈಗೊಳ್ಳಲಾಗಿದೆ.
ಬಂಧಿತ ಆರೋಪಿ ದೊರೆನಾಯ್ಕ ಮೂಲತಃ ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ತಾಂಡಾ ನಿವಾಸಿಯಾಗಿದ್ದಾರೆ. ಇವರು ಮೊದಲು ತಮ್ಮದೇ ತಾಂಡಾದ ಯುವತಿಯನ್ನು ವಿವಾಹವಾಗಿದ್ದರು. ಆದರೆ, ಆ ಬಳಿಕ ಮೊದಲ ಪತ್ನಿಗೆ ಮಾಹಿತಿ ನೀಡದೆ ಅಥವಾ ಕೌಟುಂಬಿಕ ಭಿನ್ನಾಭಿಪ್ರಾಯಗಳ ನಡುವೆಯೇ ದಾವಣಗೆರೆ ಸಮೀಪದ ಹುಲಿಕಟ್ಟಿ ತಾಂಡಾದ ಮತ್ತೊಬ್ಬ ಯುವತಿಯನ್ನು ಎರಡನೇ ವಿವಾಹವಾಗಿದ್ದರು ಎಂದು ತಿಳಿದು ಬಂದಿದೆ. ಈ ದ್ವಿಪತ್ನಿತ್ವ ಹಾಗೂ ಕೌಟುಂಬಿಕ ಕಲಹವೇ ಘಟನೆಗೆ ಮುಖ್ಯ ಕಾರಣ ಎನ್ನಲಾಗಿದೆ.
ಈ ಕೌಟುಂಬಿಕ ಕಲಹ ತಾರಕಕ್ಕೇರಿದ ಪರಿಣಾಮ ಮನನೊಂದ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಪ್ರಕರಣ ದಾಖಲಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಸೂಕ್ತ ತನಿಖೆ ನಡೆಸಿ, ಕಾನೂನು ಉಲ್ಲಂಘಿಸಿ ಎರಡನೇ ಮದುವೆಯಾಗಿ ಕಿರುಕುಳ ನೀಡಿದ ಆರೋಪದ ಮೇಲೆ ಸಹೋದ್ಯೋಗಿ ಪ್ರೊಬೇಷನರಿ ಪಿಎಸ್ಐ ದೊರೆನಾಯ್ಕ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾರೆ.