ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ಬೆಸ್ಕಾಂ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆ ಮುಂದುವರಿಯುವ ಸೂಚನೆ ಇರುವುದರಿಂದ ಗ್ರಾಹಕರಿಗೆ ಅಗತ್ಯ ಸುರಕ್ಷತಾ ಕ್ರಮಗಳ ಕುರಿತು ಅರಿವು ಮೂಡಿಸಲು ಇಂಧನ ಸಚಿವ ಕೆ.ಜೆ. ಜಾರ್ಜ್ ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಸ್ಕಾಂ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು, ಮಳೆಗಾಲ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗದಂತೆ ಅಧಿಕಾರಿಗಳು ಈಗಲೇ ಅಗತ್ಯ ಕ್ರಮ ವಹಿಸಬೇಕು ಹಾಗೂ ಅಗತ್ಯ ಸುರಕ್ಷತಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
“ಮಳೆಗಾಲ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯ ಕುರಿತು ದಾಖಲಾಗುವ ಸಾರ್ವಜನಿಕರ ದೂರುಗಳನ್ನು ಬೆಸ್ಕಾಂ ಆಧಿಕಾರಿಗಳು ಶೀಘ್ರವಾಗಿ ಪರಿಹರಿಸಬೇಕು. ಮಳೆಗಾಲಕ್ಕೆ ಮುನ್ನ ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಂಡು, ವಿದ್ಯುತ್ ವ್ಯತ್ಯಯ ಉಂಟಾಗದಂತೆ ಖಾತರಿಪಡಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದ್ದಾರೆ.
ವಿದ್ಯುತ್ ಕಂಬಗಳು ವಾಲಿದ್ದರೆ, ಅಥವಾ ಮರಗಳ ಕೊಂಬೆಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು ಕಂಡು ಬಂದಲ್ಲಿ ಅವುಗಳ ಸಮೀಪ ಹೋಗದೆ ಹತ್ತಿರದ ಬೆಸ್ಕಾಂ ಉಪ ವಿಭಾಗ ಕಚೇರಿಗೆ ಮಾಹಿತಿ ನೀಡಬೇಕು, ಬೆಸ್ಕಾಂ 1912 ಅಥವಾ ವಾಟ್ಸ್ ಆಪ್ ಸಹಾಯವಾಣಿಗೆ ದೂರು ನೀಡಲು ಬೆಸ್ಕಾಂ ವಿನಂತಿ ಮಾಡಿದೆ.
ಪೂರ್ವ ಮುಂಗಾರಿನ ಭಾರೀ ಗಾಳಿ-ಮಳೆಗೆ ವಿದ್ಯುತ್ ವಾಹಕಗಳು ತುಂಡಾಗಿ ಬಿಳುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಗಾಳಿ -ಮಳೆ ಸಂದರ್ಭದಲ್ಲಿ ವಿದ್ಯುತ್ ಕಂಬಗಳು ಹಾದು ಹೋಗಿರುವ ಮರಗಳ ಕೆಳಗೆ ನಿಲ್ಲಬಾರದು ಹಾಗೂ ವಿದ್ಯುತ್ ಪರಿವರ್ತಕಗಳ ಬಳಿ ಸುಳಿಯಬಾರದು ಎಂದು ಬೆಸ್ಕಾಂ ಸಾರ್ವಜನಿಕರಲ್ಲಿ ಮನವಿ ಮಾಡಿದೆ.