ಸರ್ಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಲೇ ಇದ್ದು, ಇದೀಗ ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆಯೊಬ್ಬರು ಆಸ್ಪತ್ರೆಯ ಹೊರಗಡೆಯೇ ನರಳಾಟ ನಡೆಸಿರುವ ಘಟನೆ ನಡೆದಿದೆ. ಸಂತ್ರಸ್ತ ಮಹಿಳೆಯನ್ನು ಕೊಪ್ಪಳ ತಾಲೂಕಿನ ಚಿಕ್ಕಬೊಮ್ಮನಾಳ ಗ್ರಾಮದ ನಿವಾಸಿ ಹುಲಿಗೇಮ್ಮ ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಬಿದ್ದು ಬೆನ್ನುಮೂಳೆಗೆ ಗಾಯ ಮಾಡಿಕೊಂಡಿದ್ದ ಇವರು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇತ್ತೀಚೆಗಷ್ಟೇ ಗ್ರಾಮಕ್ಕೆ ಮರಳಿದ್ದರು.
ಆದರೆ ಬುಧವಾರ ರಾತ್ರಿ 11 ಗಂಟೆಯ ಸುಮಾರಿಗೆ ಹುಲಿಗೇಮ್ಮ ಅವರಿಗೆ ದಿಢೀರ್ ರಕ್ತದೊತ್ತಡ ಕಡಿಮೆಯಾಗಿದೆ. ಕೂಡಲೇ ಕುಟುಂಬಸ್ಥರು ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಆಸ್ಪತ್ರೆಗೆ ಬಂದ ಸಿಬ್ಬಂದಿ ರೋಗಿಯನ್ನು ದಾಖಲಿಸಿಕೊಳ್ಳದೆ ನಿರ್ಲಕ್ಷಿಸಿದ್ದಾರೆ.
ಈ ವೇಳೆ ಕುಟುಂಬಸ್ಥರು ಅಡ್ಮಿಟ್ ಮಾಡಿಕೊಳ್ಳುವಂತೆ ಮನವಿ ಮಾಡಿದರೂ ಕೂಡ ಯಾವುದೇ ರೀತಿಯ ಸ್ಪಂದನೆ ತೋರಿಲ್ಲ. ಪರಿಣಾಮ ಗಂಭೀರ ಸ್ಥಿತಿಯಲ್ಲಿದ್ದ ಹುಲಿಗೇಮ್ಮ ಇಡೀ ರಾತ್ರಿ ಆಸ್ಪತ್ರೆಯ ಕಾರಿಡಾರ್ನಲ್ಲಿ ಸ್ಟೇಚರ್ ಮೇಲೆಯೇ ಸಾವು ಬದುಕಿನ ನಡುವೆ ಹೋರಾಡಿದ್ದಾರೆ.
ಮಾರನೇ ದಿನ ಅಂದ್ರೆ ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಮಹಿಳೆಯನ್ನು ಎಮರ್ಜೆನ್ಸಿ ವಾರ್ಡ್ ಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ತಡ ರಾತ್ರಿಯೇ ಆಸ್ಪತ್ರೆಯ ಒಳಗೆ ದಾಖಲಿಸಿಲ್ಲ ಯಾಕೆ ಎಂದು ಪ್ರಶ್ನಿಸಿದರೆ, ಉಲ್ಟಾ ಮಾತಾಡಿ ಹೋಗುತ್ತಿದ್ದಾರೆ ಎನ್ನಲಾಗಿದೆ.
ಸದ್ಯ ಜಿಲ್ಲಾಸ್ಪತ್ರೆಯ ಈ ಅವ್ಯವಸ್ಥೆಯ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದು, ಸರ್ಕಾರಿ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳಂತೆ ದರ್ಬಾರು ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಅಲ್ಲದೇ ಮಹಿಳೆಯ ಜೀವಕ್ಕೆ ಏನಾದರೂ ತೊಂದರೆಯಾದರೆ ಆಸ್ಪತ್ರೆಯ ನೇರ ಹೊಣೆ ಎಂದು ತಿಳಿಸಿದ್ದಾರೆ.