ರಾಜ್ಯದಲ್ಲಿ ಹಲವೆಡೆ ವರುಣಾರ್ಭಟ ಜಾಸ್ತಿಯಾಗಿದ್ದು, ಇಂದೂ ಸಹ ಹಲವು ಕಡೆ ಗುಡುಗು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.ಇನ್ನೂ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಿದ್ದು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರುವ ಕಾರಣ ಮಳೆಯಾಗುವ ಸಾಧ್ಯತೆ ಇದೆ.
ವರುಣನ ಆರ್ಭಟಕ್ಕೆ ಕರ್ನಾಟಕ ತತ್ತರಿಸುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯ ಇತ್ತೀಚಿನ ವರದಿಯಂತೆ ಇಂದು ರಾಜ್ಯದ ಸುಮಾರು 22 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಅತ್ತ ಉತ್ತರ ಒಳನಾಡಿನ ವಿಜಯಪುರ, ಬಾಗಲಕೋಟೆ, ಬೆಳಗಾವಿ ಹಾಗೂ ಕಲ್ಬುರ್ಗಿ ಸೇರಿದಂತೆ ಹಲವೆಡೆ ಮಳೆ ಅಬ್ಬರಿಸಲಿದೆ.
ಇನ್ನು ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆಯ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ತುಮಕೂರು, ಕೋಲಾರ, ಹಾಸನ ಮತ್ತು ಮಂಡ್ಯ ಭಾಗದಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಮಳೆ ಮುನ್ಸೂಚನೆ ಇರುವ ಜಿಲ್ಲೆಗಳ ಜನರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.